ರಾಹುಲ್ ಗಾಂಧಿ
(ಪಿಟಿಐ ಚಿತ್ರ)
ನವದೆಹಲಿ: ಪ್ರತಿಯೊಬ್ಬ ಭಾರತೀಯನ ಮತದಾನದ ಹಕ್ಕಿಗಾಗಿ ವಿರೋಧ ಪಕ್ಷಗಳು ಹೋರಾಟ ನಡೆಸುತ್ತಿದ್ದು, ಸ್ವಚ್ಛ ಹಾಗೂ ಸರಿಯಾದ ಮತದಾರರ ಪಟ್ಟಿಗಾಗಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
'ಮತ ಕಳ್ಳತನ' ಆರೋಪಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕರು ಮತ್ತು ಸಂಸದರು ಸಂಸತ್ತಿನಿಂದ ಚುನಾವಣಾ ಆಯೋಗದ ಕಚೇರಿವರೆಗೆ ಇಂದು ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ವಿಪಕ್ಷಗಳ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
'ಕರ್ನಾಟಕದ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ನಡೆಸಿದ ಪರಿಶೀಲನೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮತಗಳು ನಕಲಿಯಾಗಿವೆ ಎಂದು ಸಾಬೀತಾದರೂ ಚುನಾವಣಾ ಆಯೋಗವು ಮೌನ ವಹಿಸುತ್ತಿದೆ. ಸತ್ಯ ಇಡೀ ದೇಶದ ಮುಂದಿದೆ' ಎಂದು ಅವರು ಹೇಳಿದ್ದಾರೆ.
'ದೇಶದ ಮುಂದೆ ಸತ್ಯಾಂಶ ಇದ್ದು, ಚುನಾವಣಾ ಆಯೋಗಕ್ಕೆ ಉತ್ತರಿಸಲು ಸಾಧ್ಯವಾಗುತ್ತಿಲ್ಲ. ಇದು ಕೇವಲ ರಾಜಕೀಯ ಹೋರಾಟವಲ್ಲ. ಸಂವಿಧಾನವನ್ನು ಉಳಿಸುವ ಹೋರಾಟ' ಎಂದು ಅವರು ಪ್ರತಿಪಾದಿಸಿದ್ದಾರೆ.
'ಒಬ್ಬ ವ್ಯಕ್ತಿಗೆ ಒಂದು ಮತ' ಹಕ್ಕಿಗಾಗಿ ಈ ಹೋರಾಟ ನಡೆಯುತ್ತಿದೆ. ನಾವು ಸ್ವಚ್ಛ ಹಾಗೂ ಸರಿಯಾದ ಮತದಾರರ ಪಟ್ಟಿಗಾಗಿ ಹೋರಾಟ ನಡೆಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.