ADVERTISEMENT

ಸಿದ್ದರಾಮಯ್ಯ ಹಗರಣ ಮುಚ್ಚಿ ಹಾಕುವಾಗೇನು ಗೆಣಸು ಕೆರೆಯುತ್ತಿದ್ರಾ?: ಕಾಂಗ್ರೆಸ್‌

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್‌ ಕಿಡಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಜುಲೈ 2022, 10:39 IST
Last Updated 7 ಜುಲೈ 2022, 10:39 IST
ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ
ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ   

ಬೆಂಗಳೂರು: ‘ಸಿದ್ದರಾಮಯ್ಯ ಅವರದ್ದು ಹಗರಣಗಳನ್ನು ಮುಚ್ಚಿ ಹಾಕುವ ಸರ್ಕಾರವಾಗಿತ್ತು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕೆಯ ವಿರುದ್ಧ ಕಾಂಗ್ರೆಸ್‌ ಕಿಡಿಕಾರಿದೆ. ಆ ಸಂದರ್ಭದಲ್ಲಿ ನಿಮ್ಮ ಪಕ್ಷದವರು ಬಿಲದಲ್ಲಿ ಗೆಣಸು ಕೆರೆಯುತ್ತಿದ್ರಾ? ಅಥವಾ ಸದನದಲ್ಲಿ ಬ್ಲೂ ಫಿಲ್ಮ್‌ ನೋಡುತಿದ್ರಾ? ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ.

ಮಾನ್ಯ ಮುಖ್ಯಮಂತ್ರಿಗಳೇ, ನಿಮ್ಮ ಸರ್ಕಾರದ ಅಕ್ರಮಗಳು, ಅವಾಂತರಗಳು ಬಯಲಾದಾಗ ಕಾಂಗ್ರೆಸ್‌ ಮೇಲೆ ಅಪಾದಿಸುವ ಖಯಾಲಿ ಬೆಳೆಸಿಕೊಂಡಿದ್ದೀರಿ. ಈಗ ಅನಗತ್ಯವಾಗಿ ನಮ್ಮ ವಿರುದ್ಧ ಆರೋಪಿಸುತ್ತಿದ್ದೀರಿ ಎಂದು ಕಾಂಗ್ರೆಸ್‌ ಟ್ವೀಟ್‌ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.

‘ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಮುಖ್ಯಮಂತ್ರಿ ಸುಳ್ಳು ಮಾಹಿತಿ ಕೊಟ್ಟಿದ್ದಾರೆ’ ಎಂಬ ಸಿದ್ದರಾಮಯ್ಯ ಆರೋಪಕ್ಕೆ ಬೊಮ್ಮಾಯಿ ಅವರು ಮೇಲಿನಂತೆ ಪ್ರತಿಕ್ರಿಯಿಸಿದ್ದರು. ‘ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಸಿದ್ದರಾಮಯ್ಯ ಏನೇನೋ ಮಾತನಾಡುತ್ತಿದ್ದಾರೆ’ ಎಂದು ಕುಟುಕಿದ್ದರು.

ADVERTISEMENT

ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್‌ ಅವರು ಆರ್‌ಎಸ್‌ಎಸ್‌ನ ಶೋಷಣೆ ಸಿದ್ಧಾಂತದ ವಕ್ತಾರರಂತೆ ವರ್ತಿಸುತ್ತಿದ್ದಾರೆ ಎಂದೂ ಕಾಂಗ್ರೆಸ್‌ ಆರೋಪಿಸಿದೆ. ಸರ್ಕಾರಿ ಶಾಲೆಯಲ್ಲಿ ಕಲಿಯುವ ಬಹುತೇಕ ತಳ ಸಮುದಾಯದ ಮಕ್ಕಳನ್ನು ಶಿಕ್ಷಣ ವಂಚಿತರಾಗಿಸಲು ನಾಗಪುರದ ಕೇಂದ್ರ ಕಚೇರಿಯಿಂದ ಸುಪಾರಿ ಪಡೆದಿದ್ದಾರೆ. ಅವರ ಹುನ್ನಾರದಿಂದಲೇ ರಾಜ್ಯದ 10 ಲಕ್ಷ ಮಕ್ಕಳು ಶಿಕ್ಷಣದಿಂದ ದೂರ ಉಳಿಯುವಂತಾಗಿದೆ ಎಂದು ದೂರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.