
ಕಾಂಗ್ರೆಸ್ ಹಾಗೂ ಬಿಜೆಪಿ
ನವದೆಹಲಿ: 2020ರ ದೆಹಲಿ ಗಲಭೆ ಪ್ರಕರಣದ ಪ್ರಮುಖ ಆರೋಪಿಗಳಾದ ಶಾರ್ಜಿಲ್ ಇಮಾಮ್ಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿರುವ ಬಗ್ಗೆ ಬಿಜೆಪಿ ಪ್ರತಿಕ್ರಿಯಿಸಿದೆ. ಸುಪ್ರೀಂ ಕೋರ್ಟ್ ಆದೇಶವು ಕಾಂಗ್ರೆಸ್ಗೆ ಮಾಡಿದ ಕಪಾಳಮೋಕ್ಷವಾಗಿದ್ದು, ಆ ಪಕ್ಷವು ತುಕ್ಡೇ ತುಕ್ಡೇ ಗ್ಯಾಂಗ್ ಬೆಂಬಲಿಸಿದ್ದಕ್ಕಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದೆ.
ಖಾಲಿದ್ ಹಾಗೂ ಇಮಾಮ್ ಅವರನ್ನು ದೇಶ ವಿಭಜಕ ಶಕ್ಷಿಗಳ 'ಪೋಸ್ಟರ್ ಬಾಯ್ಗಳು'. ಅವರನ್ನು ಕಾಂಗ್ರೆಸ್ ಅಮಾಯಕರು ಎಂದು ಬಿಂಬಿಸುವ ಮೂಲಕ ರಕ್ಷಿಸುವ ಪ್ರಯತ್ನ ಮಾಡುತ್ತಿದೆ ಎಂದು ಟೀಕಿಸಿದೆ.
ಖಾಲಿದ್ ಮತ್ತು ಇಮಾಮ್ ವಿರುದ್ಧ ಕಾನೂನು ಬಾಹಿರ ಚುಟುವಟಿಕೆಗಳ ನಿಯಂತ್ರಣ ಕಾಯ್ದೆ (ಯುಎಪಿಎ) ಹಾಗೂ ಐಪಿಸಿಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
ನ್ಯಾಯಮೂರ್ತಿಗಳಾದ ಅರವಿಂದ ಕುಮಾರ್ ಹಾಗೂ ಎನ್.ವಿ ಅಂಜಾರಿಯ ಅವರಿದ್ದ ಪೀಠ, ಇತರೆ ಐವರು ಆರೋಪಿಗಳಾದ ಗುಲ್ಫಿಶಾ ಫಾತಿಮಾ, ಮೀರನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಬ್ ಅಹ್ಮದ್ ಅವರಿಗೆ ಜಾಮೀನು ನೀಡಿದೆ. ಆದರೆ, ಪ್ರಕರಣದಲ್ಲಿ ಉಮರ್ ಖಾಲಿದ್ ಮತ್ತು ಶಾರ್ಜಿಲ್ ಇಮಾಮ್ ಅವರ ಪಾತ್ರ ಭಿನ್ನವಾಗಿದೆ ಎಂದು ಅಭಿಪ್ರಾಯಪಟ್ಟಿದೆ.
ತೀರ್ಪು ಕುರಿತು ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲ ಅವರು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ನಲ್ಲಿ 'ಇವರಿಬ್ಬರ ವಿರುದ್ಧದ ಆರೋಪಗಳು ಮೇಲ್ನೋಟಕ್ಕೆ ನಿಜವಾಗಿವೆ ಎಂದು ಸುಪ್ರೀಂ ಕೋರ್ಟ್ ಅವರಿಗೆ ಜಾಮೀನು ನಿರಾಕರಿಸಿದೆ. ಇದು ಸತ್ಯಕ್ಕೆ ಸಂದ ಜಯ, ಸತ್ಯಮೇವ ಜಯತೇ' ಎಂದು ಬರೆದುಕೊಂಡಿದ್ದಾರೆ.
ಹಾಗೆಯೇ, 'ಅಫ್ಜಲ್ನಿಂದ ಉಮರ್ ಹಾಗೂ ಶಾರ್ಜೀಲ್ ವರೆಗೆ, ತುಕ್ಡೇ ತುಕ್ಡೇ ಗ್ಯಾಂಗ್ ಬೆಂಬಲಿಸಿದ್ದಕ್ಕಾಗಿ ಕಾಂಗ್ರೆಸ್ ಕ್ಷಮೆ ಕೋರಲಿ' ಎಂದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.