ನವದೆಹಲಿ: ಇದೇ ವರ್ಷದ ಜೂನ್ನಲ್ಲಿ ಕಾಂಗ್ರೆಸ್ ಪಕ್ಷವು ಹೊಸ ಚುನಾಯಿತ ಅಧ್ಯಕ್ಷರನ್ನು ಹೊಂದಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಶುಕ್ರವಾರ ಹೇಳಿದ್ದಾರೆ.
ದೆಹಲಿಯಲ್ಲಿ ನಡೆಯುತ್ತಿರುವ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾಹಿತಿ ನೀಡಿರುವ ಅವರು, 'ಪೂರ್ಣಾವಧಿ ಅಧ್ಯಕ್ಷರ ಸ್ಥಾನಕ್ಕಾಗಿ ನಡೆಯುವ ಚುನಾವಣೆಯ ವೇಳಾಪಟ್ಟಿಯನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು' ಎಂದು ತಿಳಿಸಿದ್ದಾರೆ.
ಕಳೆದ ಬಾರಿಯ ಪಕ್ಷದ ಕಾರ್ಯಕಾರಣಿ ಸಮಿತಿ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಸಾಂಸ್ಥಿಕ ಚುನಾವಣೆಗಳನ್ನು ನಡೆಸಲು ತೀರ್ಮಾನಿಸಲಾಗಿತ್ತು.
ಕಾಂಗ್ರೆಸ್ ಸರ್ಕಾರದ ಹಾಲಿ ಹಾಗೂ ಮಾಜಿ ಮುಖ್ಯಮಂತ್ರಿಗಳು, ಸಂಸದರು ಹಾಗೂ ಕಾರ್ಯಕಾರಿಣಿ ಸಮಿತಿ ಸದಸ್ಯರು ಸೇರಿದಂತೆ ಒಟ್ಟು 23 ನಾಯಕರು ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಕಳೆದ ವರ್ಷ ಪತ್ರ ಬರೆದಿದ್ದರು.
ಪತ್ರದಲ್ಲಿ ಕಾಂಗ್ರೆಸ್ ನಾಯಕತ್ವ ವಿಚಾರವನ್ನು ಪ್ರಸ್ತಾಪಿಸಿದ್ದ ಅವರು, ಪಕ್ಷದಲ್ಲಿ ಪ್ರತಿ ಹಂತದಲ್ಲಿಯೂ ದೊಡ್ಡ ಮಟ್ಟದ ಬದಲಾವಣೆಯಾಗಬೇಕಿದೆ ಎಂದು ಒತ್ತಾಯಿಸಿದ್ದರು.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್, ಉಪ ನಾಯಕ ಆನಂದ್ ಶರ್ಮಾ, ಮಾಜಿ ಮುಖ್ಯಮಂತ್ರಿಗಳಾದ ಭೂಪಿಂದರ್ ಸಿಂಗ್ ಹೂಡಾ, ಪೃಥ್ವಿರಾಜ್ ಚವಾಣ್, ಕೇಂದ್ರದ ಮಾಜಿ ಸಚಿವರಾದ ಮುಕುಲ್ ವಾಸ್ನಿಕ್, ಕಪಿಲ್ ಸಿಬಲ್, ವೀರಪ್ಪ ಮೊಯಿಲಿ, ಶಶಿ ತರೂರ್, ಸಂಸದರಾದ ಮನೀಶ್ ತಿವಾರಿ, ಮಾಜಿ ಸಂಸದರಾದ ಮಿಲಿಂದ್ ದೇವ್ರಾ, ಜಿತಿನ್ ಪ್ರಸಾದ, ಸಂದೀಪ್ ದೀಕ್ಷಿತ್ ಪತ್ರಕ್ಕೆ ಸಹಿ ಹಾಕಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.