ADVERTISEMENT

ರಾಜಸ್ಥಾನ: ಶಿವರಾತ್ರಿ ಮೆರವಣಿಗೆ ವೇಳೆ ಗುಂಪು ಘರ್ಷಣೆ– ಕಾನ್‌ಸ್ಟೆಬಲ್ ಹತ್ಯೆ

ರಾಜಸ್ಥಾನದ ಶಿರೋಹಿ ಜಿಲ್ಲೆಯಲ್ಲಿ ಶಿವರಾತ್ರಿ ಪ್ರಯುಕ್ತ ಶುಕ್ರವಾರ ಸಂಜೆ ನಡೆಯುತ್ತಿದ್ದ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ

ಪಿಟಿಐ
Published 9 ಮಾರ್ಚ್ 2024, 5:56 IST
Last Updated 9 ಮಾರ್ಚ್ 2024, 5:56 IST
   

ಜೈಪುರ: ರಾಜಸ್ಥಾನದ ಶಿರೋಹಿ ಜಿಲ್ಲೆಯಲ್ಲಿ ಶಿವರಾತ್ರಿ ಪ್ರಯುಕ್ತ ಶುಕ್ರವಾರ ಸಂಜೆ ನಡೆಯುತ್ತಿದ್ದ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ವೇಳೆ ಸ್ಥಳದಲ್ಲಿ ಗುಂಪು ಚದುರಿಸಲು ಬಂದಿದ್ದ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ದುಷ್ಕರ್ಮಿಗಳು ಕತ್ತು ಸೀಳಿ ಹತ್ಯೆ ಮಾಡಿದ್ದಾರೆ.

ಮೃತ ಕಾನ್‌ಸ್ಟೆಬಲ್‌ನನ್ನು ಸ್ವರೂಪ್‌ಗಂಜ್ ಪೊಲೀಸ್ ಠಾಣೆಯ ನಿರಂಜನ್ ಸಿಂಗ್ (30) ಎಂದು ಗುರುತಿಸಲಾಗಿದೆ.

ಶಿರೋಹಿ ಜಿಲ್ಲೆಯ ಲೌಠಾಣಾ ಎಂಬ ಹಳ್ಳಿಯಲ್ಲಿ ಶಿವರಾತ್ರಿ ಪ್ರಯುಕ್ತ ಮೆರವಣಿಗೆ ನಡೆಯುತ್ತಿತ್ತು. ಈ ವೇಳೆ ಏಕಾಏಕಿ ಎರಡು ಗುಂಪುಗಳ ಮಧ್ಯೆ ಘರ್ಷಣೆ ಸಂಭವಿಸಿದೆ. ಆಗ ಅಲ್ಲಿಗೆ ಹೊಗಿದ್ದ ಕಾನ್‌ಸ್ಟೆಬಲ್ ನಿರಂಜನ್‌ರನ್ನು ಗಲಾಟೆ ವೇಳೆ ಅಪರಿಚಿತ ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಶೀಘ್ರದಲ್ಲೇ ಹಂತಕರನ್ನು ಬಂಧಿಸಲಾಗುವುದು ಎಂದು ಶಿರೋಹಿ ಎಸ್‌.ಪಿ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ADVERTISEMENT

ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಅಶೋಕ್ ಗೆಹಲೋತ್ ಅವರು, ನಿರಂಜನ್ ಹಂತಕರನ್ನು ಕೂಡಲೇ ಬಂಧಿಸಬೇಕು ಅಲ್ಲದೇ ಮೃತನ ಕುಟುಂಬದವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.