ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ನಾಲ್ಕನೇ ಹಂತದ ಮತದಾನ ಆರಂಭವಾಗಿದ್ದು, ಮತದಾನದ ಹಕ್ಕು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಲು ಕೊಡುಗೆ ನೀಡುವಂತೆ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಮನವಿ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, 'ಇಂದು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ನಾಲ್ಕನೇ ಹಂತದ ಮತದಾನ ನಡೆಯುತ್ತಿದೆ. ಎಲ್ಲಾ ಮತದಾರರು ತಮ್ಮ ಅಮೂಲ್ಯವಾದ ಮತಗಳನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಲು ತಮ್ಮ ಕೊಡುಗೆ ನೀಡಬೇಕೆಂದು ನಾನು ವಿನಂತಿಸುತ್ತೇನೆ' ಎಂದು ಹೇಳಿದ್ದಾರೆ.
'ನಿಮ್ಮ ಒಂದು ಮತವು ರಾಜ್ಯದ ಕೋಟ್ಯಂತರ ಬಡ ಜನರ ಗೌರವ ಮತ್ತು ಹಕ್ಕುಗಳನ್ನು ರಕ್ಷಿಸಲು ಹಾಗೂ ರಾಜ್ಯವನ್ನು ಭಯ, ಭ್ರಷ್ಟಾಚಾರ ಮತ್ತು ಮಾಫಿಯಾ ಭಯೋತ್ಪಾದನೆಯಿಂದ ಮುಕ್ತವಾಗಿಡಲು ಗಣನೀಯ ಕೊಡುಗೆ ನೀಡಲಿದೆ. ಹಾಗಾಗಿ 'ಉತ್ಸಾಹದಿಂದ ಭಾಗವಹಿಸಿ' ಎಂದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮತದಾರರಿಗೆ ಕರೆ ನೀಡಿದರು.
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಕೂಡ ಟ್ವೀಟ್ ಮಾಡಿದ್ದು, 'ಮತದಾರರು ತಮ್ಮ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಲು ತಮ್ಮ ಕೈಲಾದಷ್ಟು ಕೊಡುಗೆ ನೀಡುವಂತೆ ವಿನಂತಿಸಿದ್ದಾರೆ'.
59 ವಿಧಾನಸಭೆ ಕ್ಷೇತ್ರಗಳಿಗೆ ಇಂದು ನಾಲ್ಕನೇ ಹಂತದ ಮತದಾನ ನಡೆಯುತ್ತಿದ್ದು, ಲಖನೌ, ರಾಯ್ ಬರೇಲಿ, ಲಖಿಂಪುರ ಖೇರಿ, ಸೀತಾಪುರ, ಹರ್ದೋಯಿ, ಉನ್ನಾವ್, ಫತೇಪುರ್, ಪಿಲಿಭತ್ ಮತ್ತು ಬಂದಾ ಜಿಲ್ಲೆಯ 624 ಅಭ್ಯರ್ಥಿಗಳ ಭವಿಷ್ಯ ಇಂದು ಮತಪೆಟ್ಟಿಗೆಗಳಲ್ಲಿ ಭದ್ರವಾಗಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.