ಗಾಜಿಯಾಬಾದ್: ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ದೆಹಲಿ– ಉತ್ತರ ಪ್ರದೇಶ ಗಡಿಭಾಗ ಗಾಜಿಪುರದಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಮತ್ತು ಸುರುಳಿಯಾಕಾರದ ಮುಳ್ಳು ತಂತಿಗಳನ್ನು ದೆಹಲಿ ಪೋಲಿಸರು ಶುಕ್ರವಾರದಿಂದ ತೆರವುಗೊಳಿಸಲು ಆರಂಭಿಸಿದ್ದಾರೆ.
ದೆಹಲಿಯ ಗಡಿ ಭಾಗಗಳಾದ ಸಿಂಘು, ಟಿಕ್ರಿ ಮತ್ತು ಗಾಜಿಪುರದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಸ್ಥಳ ಹೊರತುಪಡಿಸಿ ರಸ್ತೆಗಳಲ್ಲಿ ಹಾಕಿರುವ ಬ್ಯಾರಿಕೇಡ್ಗಳನ್ನು ತೆರೆದು, ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವಂತೆ ಸುಪ್ರೀಂ ಕೋರ್ಟ್ ಅಕ್ಟೋಬರ್ 21ರಂದು ನಿರ್ದೇಶನ ನೀಡಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಈ ಬ್ಯಾರಿಕೇಡ್ಗಳನ್ನು ತೆಗೆಯಲು ಮುಂದಾಗಿದ್ದಾರೆ.
ಇದೇ ವೇಳೆ ಪೊಲೀಸರು ಮತ್ತು ಕಾರ್ಮಿಕರು ಗಾಜಿಪುರದ ರಾಷ್ಟ್ರೀಯ ಹೆದ್ದಾರಿ 9ರಲ್ಲಿ ಹಾಕಲಾಗಿದ್ದ ಕಬ್ಬಿಣದ ಮೊಳೆಗಳನ್ನು ತೆಗೆದುಹಾಕುತ್ತಿರುವುದು ಕಂಡು ಬಂದಿತು.
ಇದೇ ರಸ್ತೆಯಲ್ಲಿ ರೈತರು 2020ರ ನವೆಂಬರ್ನಿಂದ, ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ಭಾರತೀಯ ಕಿಸಾನ್ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.
ಈ ವರ್ಷದ ಜನವರಿ 26ರಂದು ರೈತರ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದ ನಂತರ, ರೈತರು ಪ್ರತಿಭಟನೆ ನಡೆಸುತ್ತಿದ್ದ ದೆಹಲಿಯ ಗಡಿ ಭಾಗಗಳ ಹೆದ್ದಾರಿಗಳಲ್ಲಿ ಕಬ್ಬಿಣ ಮತ್ತು ಸಿಮೆಂಟ್ಗಳ ಬ್ಯಾರಿಕೇಡ್ ಹಾಕಲಾಗಿತ್ತು. ಇದರ ಜೊತೆಗೆ ಐದಾರು ಸಾಲುಗಳಲ್ಲಿ ಸುರುಳಿಯಾಕಾರ ಮುಳ್ಳುತಂತಿಗಳನ್ನು ಜೋಡಿಸಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.