ನವದೆಹಲಿ:ಶನಿವಾರ ಒಂದೇ ದಿನ ದೇಶದಲ್ಲಿ 179 ಕೊರೊನಾ ವೈರಾಣು ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ಇದು ಈವರೆಗೆ ಒಂದೇ ದಿನದಲ್ಲಿ ದೇಶದಲ್ಲಿ ಅಗಿರುವ ಅತಿ ದೊಡ್ಡ ಏರಿಕೆ. ಇದರೊಂದಿಗೆ ಸೋಂಕಿತರ ಒಟ್ಟು ಸಂಖ್ಯೆ 1029ಕ್ಕೆ ಏರಿದೆ.
ಕೇರಳ, ಗುಜರಾತ್ ಮತ್ತು ತೆಲಂಗಾಣದಲ್ಲಿ ತಲಾ ಒಬ್ಬರು ಕೋವಿಡ್–19ಕ್ಕೆ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಆದರೆ, ಸಾವಿನ ಸಂಖ್ಯೆ 19 ಮಾತ್ರ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಬಿಡುಗಡೆ ಮಾಡಿದ ಮಾಹಿತಿ ತಿಳಿಸಿದೆ. ಈವರೆಗೆ 84 ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಹೋಗಿದ್ದಾರೆ.
ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಅಂದರೆ, 186 ಪ್ರಕರಣಗಳು ವರದಿಯಾಗಿವೆ. ಕೇರಳದಲ್ಲಿ ಸೋಂಕಿತರ ಸಂಖ್ಯೆ 182ಕ್ಕೆ ಏರಿದೆ.
ಆರೋಗ್ಯ ಸೇವೆ ಮೂಲಸೌಕರ್ಯಗಳನ್ನು ಇನ್ನಷ್ಟು ಗಟ್ಟಿಗೊಳಿಸುವ ಪ್ರಯತ್ನಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೀವ್ರಗೊಳಿಸಿವೆ. ಉಸಿರಾಟದ ತೀವ್ರ ಸಮಸ್ಯೆಗೆ ಒಳಗಾಗುವ ರೋಗಿಗಳಿಗೆ ಅತ್ಯಗತ್ಯವಾದ ವೆಂಟಿಲೇಟರ್ಗಳನ್ನು ಸಜ್ಜುಗೊಳಿಸುವ ಕೆಲಸವೂ ನಡೆದಿದೆ. ದೇಶವು ಸೋಂಕು ಹರಡುವಿಕೆಯ ಮೂರನೇ ಹಂತದತ್ತ ಸಾಗುವ ಆತಂಕದ ನಡುವೆಯೇ, ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ದೇಣಿಗೆ ನಿಧಿಯನ್ನು ಸ್ಥಾಪಿಸಿರುವುದಾಗಿ ಪ್ರಕಟಿಸಿದ್ದಾರೆ.
ವಲಸೆ ಕಾರ್ಮಿಕರಿಗೆ ಆಹಾರ ಮತ್ತು ಆಶ್ರಯ ಒದಗಿಸಲು ರಾಜ್ಯ ವಿಪತ್ತು ನಿರ್ವಹಣಾ ನಿಧಿಯಲ್ಲಿರುವ ₹29 ಸಾವಿರ ಕೋಟಿ ಬಳಸಲು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.ದೇಶದಲ್ಲಿ ಕೊರೊನಾ ಸೋಂಕು ಸಾಮುದಾಯಿಕವಾಗಿರುವ ಲಕ್ಷಣಗಳು ಕಂಡು ಬಂದಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ ಪುನರುಚ್ಚರಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.