ನವದೆಹಲಿ: ಈ ವಾರಾಂತ್ಯದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 50,357 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, 577 ಸೋಂಕಿತರು ಮೃತಪಟ್ಟಿದ್ದಾರೆ. ದೇಶದಲ್ಲಿ ಈವರೆಗೆ ಒಟ್ಟು 84,62,081ಪ್ರಕರಣಗಳು ಬೆಳಕಿಗೆ ಬಂದಿದ್ದು, 1,25,562 ಮಂದಿ ಸಾವಿಗೀಡಾಗಿದ್ದಾರೆ. 78,19,887 ಸೋಂಕಿತರು ಗುಣಮುಖರಾಗಿದ್ದು, 5,16,632 ಸಕ್ರಿಯ ಪ್ರಕರಣಗಳಿವೆ.
ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಇಂಟರ್ ನ್ಯಾಷನಲ್ ಲಿಮಿಟೆಡ್ ಐಎಂಆರ್ಸಿ ಸಹಯೋಗದಲ್ಲಿ ಒಡಿಶಾದಲ್ಲಿ ಕೊವಾಕ್ಸಿನ್ ಲಸಿಕೆ ತಯಾರಿಸುವುದಾಗಿ ಘೋಷಣೆ ಮಾಡಿದೆ. ಈ ಘಟಕದಲ್ಲಿ ಕೊವಾಕ್ಸಿನ್ ಸೇರಿದಂತೆ ಮಲೇರಿಯಾ ಲಸಿಕೆ ಹಾಗೂ ಇತರೆ 10 ಲಸಿಕೆಗಳನ್ನು ತಯಾರಿಸಲಾಗುವುದು ಎಂದು ಸಂಸ್ಥೆ ತಿಳಿಸಿದೆ.
ಲಸಿಕೆ ತಯಾರಿಕೆ ಘಟಕಕ್ಕಾಗಿ ಭಾರತ್ ಬಯೋಟೆಕ್ ಕಂಪನಿಯು ₹ 300 ಕೋಟಿ ಬಂಡವಾಳ ಹೂಡಲಿದೆ ಎಂದು ಸಂಸ್ಥೆಯು ತಿಳಿಸಿದೆ.
ದೇಶದಲ್ಲಿ ಕೋವಿಡ್ನಿಂದ ಚೇತರಿಸಿಕೊಂಡವರ ಪ್ರಮಾಣ ಶೇ.92.41ಕ್ಕೆ ತಲುಪಿದ್ದು, ಶೇ. 6.11 ಸಕ್ರಿಯ ಪ್ರಕರಣಗಳಿವೆ. ಸೋಂಕಿನಿಂದ ಮೃತಪಟ್ಟವರ ಪ್ರಮಾಣ ಶೇ. 1.48 ಇದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.