ನವದೆಹಲಿ: ಎಲ್ಲರಿಗೂ ಕೋವಿಡ್ ಲಸಿಕೆಯನ್ನು ಉಚಿತವಾಗಿ ಒದಗಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿದ್ದಾರೆ.
ಕೊರೊನಾ ವೈರಸ್ ಸೋಂಕು ಈ ಶತಮಾನದ ಅತಿದೊಡ್ಡ ಸಾಂಕ್ರಾಮಿಕ ಪಿಡುಗಾಗಿದೆ ಎಂದು ಕೇಜ್ರಿವಾಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ವಿಚಾರವಾಗಿ ಶನಿವಾರ ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅವರು, 'ಕೋವಿಡ್ನಿಂದ ನಮ್ಮ ಜನರನ್ನು ರಕ್ಷಿಸುವುದು ಮುಖ್ಯ. ಎಲ್ಲರಿಗೂ ಉಚಿತ ಲಸಿಕೆ ಸಿಗುವಂತೆ ನೋಡಿಕೊಳ್ಳಬೇಕೆಂದು ನಾನು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ. ಇದಕ್ಕಾಗಿ ಹಣವನ್ನು ವ್ಯಯಿಸುವುದರಿಂದ ಸಾಕಷ್ಟು ಜೀವಗಳನ್ನು ಉಳಿಸಬಹುದು' ಎಂದು ಹೇಳಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ವಾಸಿಸುವ ಎಲ್ಲ ಜನರಿಗೆ ಉಚಿತವಾಗಿ ಕೋವಿಡ್ ಲಸಿಕೆ ನೀಡಲಾಗುವುದು ಎಂದು ದೆಹಲಿ ಸರ್ಕಾರ ಈಗಾಗಲೇ ಘೋಷಿಸಿದೆ.
ದೇಶದಲ್ಲಿ ಮೊದಲ ಹಂತದ ಕೊರೊನಾ ಲಸಿಕೆ ಹಾಕಿಸುವ ಕಾರ್ಯಕ್ರಮಕ್ಕೆ 140 ಕೋಟಿಯಿಂದ 180 ಕೋಟಿ ಡಾಲರ್ ಖರ್ಚಾಗಬಹುದು. ಜಾಗತಿಕ ಲಸಿಕೆ ಹಂಚಿಕೆ ಯೋಜನೆ ‘ಕೊವ್ಯಾಕ್ಸ್’ ಬೆಂಬಲದ ಹೊರತಾಗಿಯೂ ಇಷ್ಟು ವೆಚ್ಚವಾಗಬಹುದು ಎಂದು ಜಿಎವಿಐ ಅಂದಾಜಿಸಿದೆ.
ಜಾಗತಿಕವಾಗಿ ಅತಿಹೆಚ್ಚು ಮಂದಿಗೆ ಕೊರೊನಾ ಸೋಂಕು ತಗುಲಿರುವ ದೇಶಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಭಾರತದಲ್ಲಿ ಮುಂದಿನ 6ರಿಂದ 8 ತಿಂಗಳುಗಳಲ್ಲಿ 30 ಕೋಟಿ ಜನರಿಗೆ ಲಸಿಕೆ ಹಾಕಿಸುವ ಯೋಜನೆ ಹಾಕಿಕೊಳ್ಳಲಾಗಿದೆ. ಆಸ್ಟ್ರಾಜೆನೆಕಾ, ರಷ್ಯಾದ ಸ್ಪುಟ್ನಿಕ್ ವಿ, ಝೈಡಸ್ ಕ್ಯಾಡಿಲಾ ಹಾಗೂ ದೇಶೀಯ ಭಾರತ್ ಬಯೋಟೆಕ್ ಸಂಸ್ಥೆ ಅಭಿವೃದ್ಧಿಪಡಿಸಿರುವ ಲಸಿಕೆಗಳನ್ನು ಭಾರತ ಬಳಸಿಕೊಳ್ಳುವ ನಿರೀಕ್ಷೆ ಇದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.