ನವದೆಹಲಿ: ಕೋವಿಡ್-19 ಸೋಂಕು ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮೇ 17ರ ವರೆಗೆ ಲಾಕ್ಡೌನ್ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
ದೆಹಲಿಯಲ್ಲಿ ಇನ್ನೊಂದು ವಾರ ಲಾಕ್ಡೌನ್ ವಿಸ್ತರಿಸಲಾಗಿದ್ದು, ಮೆಟ್ರೊಸೇವೆ ಸ್ಥಗಿತಗೊಳಿಸಲಾಗಿದೆ ಎಂದು ಕೇಜ್ರಿವಾಲ್ ಮಾಹಿತಿ ನೀಡಿದ್ದಾರೆ.
ಕೋವಿಡ್-19 ಎರಡನೇ ಅಲೆ ತೀವ್ರವಾಗಿ ವ್ಯಾಪಿಸಿದ ಹಿನ್ನೆಲೆಯಲ್ಲಿ ಏಪ್ರಿಲ್ 20ರಂದು ದೆಹಲಿಯಲ್ಲಿ ಲಾಕ್ಡೌನ್ ಜಾರಿಗೊಳಿಸಲಾಗಿತ್ತು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಕಳೆದ ಎರಡು ಮೂರು ದಿನಗಳಲ್ಲಿ ಪಾಸಿಟಿವ್ ಪ್ರಕರಣಗಳು ಶೇಕಡಾ 35ರಿಂದ 23ಕ್ಕೆ ಇಳಿಕೆಯಾಗಿದೆ ಎಂದಿದ್ದಾರೆ.
ವೈದ್ಯಕೀಯ ಮೂಲಸೌಕರ್ಯವನ್ನು ಹೆಚ್ಚಿಸಲು ಮತ್ತು ವಿವಿಧ ಸ್ಥಳಗಳಲ್ಲಿ ಆಮ್ಲಜನಕ ಹಾಸಿಗೆಗಳನ್ನು ಹೆಚ್ಚಿಸಲು ನಾವು ಲಾಕ್ಡೌನ್ ಅವಧಿಯನ್ನು ಬಳಕೆ ಮಾಡಿದ್ದೇವೆ. ದೆಹಲಿಯಲ್ಲಿ ಆಮ್ಲಜನಕಪೂರೈಕೆಯ ಪರಿಸ್ಥಿತಿ ಸುಧಾರಿಸಿದೆ. ಸದ್ಯಕ್ಕೆ ಭಯದ ಆತಂಕವಿಲ್ಲ ಎಂದು ಹೇಳಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ಮೂರನೇ ಹಂತದ ಕೋವಿಡ್ ಲಸಿಕೆ ವಿತರಣೆ ಬಗ್ಗೆ ಮಾಹಿತಿ ನೀಡಿದ ಅವರು, ನಾವು ನಮ್ಮ ಶಾಲೆಗಳಲ್ಲಿ ಅತ್ಯುತ್ತಮ ವ್ಯವಸ್ಥೆಯನ್ನು ಮಾಡಿದ್ದೇವೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. ಲಸಿಕೆಗಳ ಕೊರತೆಯಿದ್ದರೂ ಕೇಂದ್ರ ಸರ್ಕಾರ ನಮಗೆ ನೆರವು ಮಾಡಲಿದೆ ಎಂದು ಭಾವಿಸುತ್ತೇವೆ ಎಂದಿದ್ದಾರೆ.
ಶನಿವಾರ ಬಿಡುಗಡೆಯಾದ ದೆಹಲಿ ಹೆಲ್ತ್ ಬುಲೆಟಿನ್ ಪ್ರಕಾರ, ಕಳೆದ 24 ತಾಸಿನಲ್ಲಿ 17,364 ಕೋವಿಡ್ ಸೋಂಕು ಪ್ರಕರಣಗಳು ದಾಖಲಾಗಿದ್ದು, 332 ಮಂದಿ ಮೃತಪಟ್ಟಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.