ನವದೆಹಲಿ (ಪಿಟಿಐ): ‘ಕೊರೊನಾ ಸಾಂಕ್ರಾಮಿಕದ ನಡುವೆಯೂ ಬಿಹಾರ, ಪಶ್ಚಿಮಬಂಗಾಳ ಮತ್ತು ಇತರ ನಾಲ್ಕು ರಾಜ್ಯಗಳಲ್ಲಿ ನಡೆಸಿದ ವಿಧಾನಸಭಾ ಚುನಾವಣೆಗಳಲ್ಲಿ ಸಾಕಷ್ಟು ಅನುಭವ ಪಡೆದಿದ್ದು, ಮುಂದಿನ ವರ್ಷದ ಆರಂಭದಲ್ಲಿ ಉತ್ತರ ಪ್ರದೇಶ ಮತ್ತು ಪಂಜಾಬ್ ಸೇರಿದಂತೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳನ್ನು ಚುನಾವಣಾ ಆಯೋಗವು ಸಕಾಲದಲ್ಲಿ ಯಶಸ್ವಿಯಾಗಿ ನಡೆಸುವ ವಿಶ್ವಾಸ ಹೊಂದಿದೆ’ ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಪ್ರತಿಪಾದಿಸಿದ್ದಾರೆ.
‘ವಿಧಾನಸಭೆಯ ಅವಧಿ ಮುಗಿಯುವ ಮುನ್ನ ಚುನಾವಣೆ ನಡೆಸಿ ಜಯಗಳಿಸಿದ ಅಭ್ಯರ್ಥಿಗಳ ಪಟ್ಟಿಯನ್ನು ರಾಜ್ಯಪಾಲರಿಗೆ ಸಲ್ಲಿಸುವುದು ಚುನಾವಣಾ ಆಯೋಗದ ಪ್ರಮುಖ ಕರ್ತವ್ಯ. ಮುಂದಿನ ವರ್ಷ ಚುನಾವಣೆಗಳನ್ನು ಐದು ರಾಜ್ಯಗಳಲ್ಲಿ ನಿಗದಿತ ಸಮಯಕ್ಕೆ ನಿಗದಿತ ವೇಳಾಪಟ್ಟಿಯ ಪ್ರಕಾರವೇ ನಾವು ಸಂಪೂರ್ಣವಾಗಿ ನಡೆಸುತ್ತೇವೆ’ ಎಂದು ಅವರು ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಕೋವಿಡ್ -19ರ ಕಾರಣದಿಂದಾಗಿ ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಯನ್ನು ಸಮಯಕ್ಕೆ ಸರಿಯಾಗಿ ನಡೆಸಲು ಚುನಾವಣಾ ಆಯೋಗಕ್ಕೆ ಸಾಧ್ಯವಿದೆಯೇ ಎಂದು ಕೇಳಲಾದ ಪ್ರಶ್ನೆಗೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.
‘ಕೋವಿಡ್ 19ರ ಎರಡನೇ ಅಲೆ ಕಡಿಮೆಯಾಗುತ್ತಿದೆ. ಸೋಂಕುಗಳ ಸಂಖ್ಯೆಯೂ ಕಡಿಮೆಯಾಗಿದೆ. ಸಾಂಕ್ರಾಮಿಕದ ಸಮಯದಲ್ಲಿ ನಾವು ಬಿಹಾರ ಮತ್ತು ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ಚುನಾವಣೆಗಳನ್ನು ಮಾಡಿದ್ದೇವೆ. ಸಾಂಕ್ರಾಮಿಕದ ಸಮಯದಲ್ಲಿ ಮತದಾನ ಹೇಗೆ ನಡೆಸಬೇಕೆಂಬುದರ ಬಗ್ಗೆ ನಾವು ಸಾಕಷ್ಟು ಅನುಭವಗಳನ್ನು ಕಲಿತಿದ್ದೇವೆ’ ಎಂದು ಅವರು ಹೇಳಿದರು.
ಗೋವಾ, ಮಣಿಪುರ, ಪಂಜಾಬ್ ಮತ್ತು ಉತ್ತರಾಖಂಡದ ವಿಧಾನಸಭೆಗಳ ಅವಧಿ 2022ರ ಮಾರ್ಚ್ನಲ್ಲಿ ಮುಕ್ತಾಯಗೊಳ್ಳಲಿದ್ದು, ಉತ್ತರಪ್ರದೇಶದ ವಿಧಾನಸಭೆಯ ಅವಧಿ ಮೇ ತಿಂಗಳಲ್ಲಿ ಕೊನೆಗೊಳ್ಳಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.