ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್-19 ನಾಲ್ಕನೇ ಅಲೆ ಎಬ್ಬಿದ್ದು, ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಆದರೆ ಮಗದೊಮ್ಮೆ ಲಾಕ್ಡೌನ್ ಹೇರುವ ಯಾವುದೇ ಯೋಜನೆಯಿಲ್ಲ, ಕೆಲವು ನಿರ್ಬಂಧಗಳನ್ನು ಹೇರಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ.
ಲಾಕ್ಡೌನ್ ಪರಿಹಾರವಲ್ಲ. ಆದರೂ ಸೋಂಕು ಹರಡುವುದನ್ನು ತಡೆಗಟ್ಟಲು ನಾವು ಕೆಲವು ನಿರ್ಬಂಧಗಳನ್ನು ಹೇರಲಾಗುವುದು. ಈ ಸಂಬಂಧ ಮುಂದಿನ ಕೆಲವೇ ದಿನಗಳಲ್ಲಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗುವುದು. ಕೋವಿಡ್ ಕೇಂದ್ರಗಳನ್ನು ಮರುಸ್ಥಾಪಿಸಲಾಗಿದ್ದು, ಈಗಾಗಲೇ ಕಾರ್ಯ ನಿರ್ವಹಿಸುತ್ತಿವೆ ಎಂದು ಹೇಳಿದ್ದಾರೆ.
ಪ್ರಸ್ತುತ ಬೇಕಾದಷ್ಟು ಹಾಸಿಗೆಗಳು ಹಾಗೂ ವೆಂಟಿಲೇಟರ್ಗಳನ್ನು ಸಿದ್ಧಪಡಿಸಲಾಗಿದೆ. ದೆಹಲಿ ಜನತೆಯ ಸುರಕ್ಷತೆಯನ್ನು ಖಾತರಿಪಡಿಸಲಿದ್ದೇವೆ ಎಂದು ಹೇಳಿದ್ದಾರೆ.'
ಕಳೆದ ಕೆಲವು ದಿನಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾವೈರಸ್ ಪ್ರಕರಣ ಹಾಗೂ ಸಾವಿನ ಸಂಖ್ಯೆಗಳು ಗಣನೀಯವಾಗಿ ವೃದ್ಧಿಸಿದೆ. ಶುಕ್ರವಾರದಂದು 8,521 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದೆ. ಕಳೆದ ವರ್ಷ ನವೆಂಬರ್ 11ರ ಬಳಿಕ ದಿನವೊಂದರಲ್ಲಿ ದಾಖಲಾದ ಗರಿಷ್ಠ ಪ್ರಕರಣ ಇದಾಗಿದೆ. ಹಾಗೆಯೇ ಶುಕ್ರವಾರದಂದು 39 ಮಂದಿ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 11,196ಕ್ಕೆ ತಲುಪಿದೆ.
ದೆಹಲಿಯಲ್ಲಿ ನಾಲ್ಕನೇ ಅಲೆ ಎಬ್ಬಿರುವ ಹಿನ್ನೆಲೆಯಲ್ಲಿ ಲೋಕ್ ನಾಯಕ್ ಜೈ ಪ್ರಕಾಶ್ ನಾರಾಯಣ ಆಸ್ಪತ್ರೆಗೆ ಭೇಟಿ ನೀಡಿದ ಅರವಿಂದ್ ಕೇಜ್ರಿವಾಲ್ ಸಿದ್ಧತೆ ಹಾಗೂ ಕೋವಿಡ್ ರೋಗಿಗಳಿಗೆ ಒದಗಿಸಿದ ಸೌಲಭ್ಯಗಳನ್ನು ಪರಿಶೀಲಿಸಿದರು.
ಈಗಿನ ಪರಿಸ್ಥಿತಿಯಲ್ಲಿ 1,500 ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗಾಗಿ ಕಾಯ್ದಿರಿಸಲಾಗಿದೆ. ಈ ಸಂಖ್ಯೆಯನ್ನು ಬೇಕಿದ್ದರೆ ಹೆಚ್ಚಿಸಲಾಗುವುದು ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಕಳೆದ ಕೆಲವು ದಿನಗಳಿಂದ ದೆಹಲಿ ಸೇರಿದಂತೆ ದೇಶದಲ್ಲಿ ಕೊರೊನಾವೈರಸ್ ಪ್ರಕರಣಗಳು ಹೆಚ್ಚಾಗಿದೆ. ಏಕಕಾಲದಲ್ಲಿ ನಾವು ಲಸಿಕೆ ವಿತರಣೆ ಜೊತೆಗೆ ಕೋವಿಡ್ ಹರಡುವುದನ್ನು ತಡೆಗಟ್ಟಲು ಪರಿಣಾಮಕಾರಿಯಾದ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.