ನವದೆಹಲಿ: ಕೊರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎನ್ಇಇಟಿ – ಜೆಇಇ ಪರೀಕ್ಷೆಗಳನ್ನು ಮುಂದೂಡಬೇಕು ಹಾಗೂ ಆರು ತಿಂಗಳ ಕಾಲೇಜು ಶುಲ್ಕವನ್ನು ಮನ್ನಾ ಮಾಡುವಂತೆ ಒತ್ತಾಯಿಸಿ ನ್ಯಾಷನಲ್ ಸ್ಟುಡೆಂಟ್ ಯೂನಿಯನ್ ಆಫ್ ಇಂಡಿಯಾ (ಎನ್ಎಸ್ಯುಇ) ಕಾರ್ಯಕರ್ತರು ಬುಧವಾರದಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ಎನ್ಎಸ್ಯುಐ ದೆಹಲಿ ಘಟಕದ ಅಧ್ಯಕ್ಷ ನೀರಜ್ ಕುಮಾರ್ ನೇತೃತ್ವದಲ್ಲಿ ಸಂಘಟನೆಯ ಎಂಟು ಸದಸ್ಯರು ಈ ಅನಿರ್ದಿಷ್ಟಾವಧಿ ಉಪಾವಸ ಸತ್ಯಾಗ್ರಹ ಆರಂಭಿಸಿದ್ದಾರೆ.
ಕೊರೊನಾ ಸೋಂಕಿನ ಕಾರಣದಿಂದಾಗಿ ಅಖಿಲ ಭಾರತ ಮಟ್ಟದ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಒತ್ತಾಯಿಸಿ ಕಳೆದವಾರ ಎನ್ಎಸ್ಯುಐ ಘಟಕದವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ವಿವಿಧ ಪಕ್ಷಗಳ ಹಲವು ರಾಜಕೀಯ ನಾಯಕರು ಪೋಷಕರ ಆತಂಕ ಮತ್ತು ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ಪ್ರವೇಶ ಪರೀಕ್ಷೆಗಳನ್ನು ಮುಂದೂಡುವಂತೆ ಕೇಂದ್ರವನ್ನು ಒತ್ತಾಯಿಸಿದ್ದಾರೆ. ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.