ನವದೆಹಲಿ: ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ತುರ್ತು ಪರಿಸ್ಥಿತಿ ಎದುರಿಸಲು ಅಗತ್ಯವಿರುವಷ್ಟು ಆಮ್ಲಜನಕವನ್ನು ಹೆಚ್ಚುವರಿಯಾಗಿ ದಾಸ್ತಾನು ಮಾಡಿಕೊಳ್ಳಲು ಸಿದ್ಧತೆ ಮಾಡಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ನ್ಯಾಯಮೂರ್ತಿ ಡಿ.ವೈ.ಚಂದ್ರೂಡ್ ನೇತೃತ್ವದ ತ್ರಿಸದಸ್ಯ ನ್ಯಾಯಪೀಠ ಈ ನಿರ್ದೇಶನ ನೀಡಿದ್ದು, ‘ಹೆಚ್ಚುವರಿ ಆಮ್ಲಜನಕ ಸಂಗ್ರಹವನ್ನು ವಿಕೇಂದ್ರಿಕರಣಗೊಳಿಸಬೇಕು ಎಂದು ಸೂಚಿಸಿದೆ.
‘ಇದರಿಂದ, ನಿತ್ಯದ ಆಮ್ಲಜನಕ ಪೂರೈಕೆಯಲ್ಲಿ ತುಸು ವ್ಯತ್ಯಾಸವಾದರೂ, ತಕ್ಷಣವೇ ಸರಿಪಡಿಸಿಕೊಳ್ಳಲು ಅನುಕೂಲವಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
‘ಮುಂದಿನ ನಾಲ್ಕು ದಿನಗಳಲ್ಲಿ ತುರ್ತು ಬಳಕೆಗೆ ಬೇಕಾಗುವ ಆಮ್ಲಜನಕವನ್ನು ಸಂಗ್ರಹಿಸಬೇಕು. ಈ ದಾಸ್ತಾನು ಪ್ರತಿ ರಾಜ್ಯ ಮತ್ತು ಕೇಂದ್ರಾಳಿತ ಪ್ರದೇಶಕ್ಕೆ ಪೂರೈಕೆಯಾಗುತ್ತಿರುವುದನ್ನು ವರ್ಚುವಲ್ ಕಂಟ್ರೋಲ್ ರೂಮ್ ಮೂಲಕ ಮೇಲ್ವಿಚಾರಣೆ ಮಾಡಬೇಕು. ಇದು ದಿನ ನಿತ್ಯ ರಾಜ್ಯಗಳಿಗೆ ಪೂರೈಕೆಯಾಗುವ ಆಮ್ಲಜನಕದ ಜತೆಗೆ, ಹೆಚ್ಚುವರಿಯಾಗಿ ಪೂರೈಸಬೇಕು‘ ಎಂದು ನ್ಯಾಯಪೀಠ ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.