ನವದೆಹಲಿ: ಜನವರಿ 16ರಿಂದ ಆದ್ಯತೆ ಮೇರೆಗೆ 3 ಕೋಟಿ ಆರೋಗ್ಯ ಸೇವೆ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ಹಾಕುವ ಮೂಲಕ ಲಸಿಕೆ ಅಭಿಯಾನ ಆರಂಭಿಸಲಾಗುವುದು ಎಂದು ಶನಿವಾರ ಕೇಂದ್ರ ಸರ್ಕಾರ ಪ್ರಕಟಿಸಿದೆ.
ದೇಶದಲ್ಲಿ ಕೋವಿಡ್ ಪರಿಸ್ಥಿತಿ ಮತ್ತು ಲಸಿಕೆ ವಿತರಣೆಗೆ ಮಾಡಿಕೊಳ್ಳಲಾಗಿರುವ ವ್ಯವಸ್ಥೆ ಕುರಿತಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಪರಿಶೀಲನೆ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.
"ವಿವರವಾದ ಪರಿಶೀಲನೆ ಬಳಿಕ ಮುಂಬರುವ ಲೊಹ್ರಿ, ಮಕರ ಸಂಕ್ರಾಂತಿ, ಪೊಂಗಲ್ ಮುಂತಾದ ಹಬ್ಬಗಳನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಜನವರಿ 16ರಿಂದ ಲಸಿಕೆ ವಿತರಣೆ ಆರಂಭಿಸಲು ನಿರ್ಧರಿಸಲಾಗಿದೆ," ಎಂದು ಸರ್ಕಾರ ಹೇಳಿಕೆ ಬಿಡುಗಡೆ ಮಾಡಿದೆ.
ಆರೋಗ್ಯ ಸೇವೆ ಮತ್ತು ಮುಂಚೂಣಿ ಕಾರ್ಯಕರ್ತರ ಬಳಿಕ 50 ವರ್ಷ ಮೇಲ್ಪಟ್ಟ, 50 ವರ್ಷದೊಳಗಿನ 27 ಕೋಟಿ ಜನರಿಗೆ ಆದ್ಯತೆ ಮೇರೆಗೆ ಲಸಿಕೆ ವಿತರಣೆ ಮಾಡಲಾಗುತ್ತದೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.
"ಸುರಕ್ಷಿತ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕೋವಿಶೀಲ್ ಮತ್ತು ಕೊವ್ಯಾಕ್ಸಿನ್ ಲಸಿಕೆಗಳ ತುರ್ತು ಬಳಕೆಗೆ ಭಾರತದ ಔಷಧ ನಿಯಂತ್ರಕವು ಅನುಮೋದನೆ ನೀಡಿತ್ತು,‘ ಎಂದು ಸರ್ಕಾರ ತಿಳಿಸಿದೆ.
ದೇಶದಲ್ಲಿ ಸದ್ಯ, 2,24,190 ಸಕ್ರಿಯ ಕೋವಿಡ್ ಪ್ರಕರಣಗಳಿದ್ದು, 1.04 ಕೋಟಿ ಜನರಿಗೆ ಸೋಂಕು ತಗುಲಿದೆ. ಕೋವಿಡ್ನಿಂದ ಇದುವರೆಗೆ 1.5 ಲಕ್ಷ ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವಾಲಯದ ಇತ್ತೀಚಿನ ವರದಿ ತಿಳಿಸಿದೆ..
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.