ನವದೆಹಲಿ: ದೇಶದಲ್ಲಿ ಸೋಮವಾರ ಒಂದೇ ದಿನ ಕೋವಿಡ್–19 ಪ್ರಕರಣಗಳು ಒಂದು ಲಕ್ಷ ದಾಟಿವೆ. ಹೀಗಾಗಿ, ಹೆಚ್ಚುತ್ತಿರುವ ಪ್ರಕರಣಗಳನ್ನು ನಿಯಂತ್ರಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 8ರಂದು ಮುಖ್ಯಮಂತ್ರಿಗಳ ಜತೆ ಸಭೆ ನಡೆಸಲಿದ್ದಾರೆ.
ಈ ಸಭೆಗೆ ಮುನ್ನ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗಿರುವ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸಚಿವರ ಜತೆ ಸಮಾಲೋಚನೆ ನಡೆಸಲಿದ್ದಾರೆ.
ಫೆಬ್ರುವರಿ 8ರಿಂದ ದೇಶದಲ್ಲಿ ಸೋಂಕು ಪ್ರಕರಣಗಳು 12 ಪಟ್ಟು ಹೆಚ್ಚಾಗಿವೆ. ಕಳೆದ ವರ್ಷ ಜನವರಿಯಲ್ಲಿ ಸೋಂಕು ಕಾಣಿಸಿಕೊಂಡ ಬಳಿಕ ಇದೇ ಮೊದಲ ಬಾರಿ ಒಂದು ಲಕ್ಷ ಮೀರಿ ಪ್ರಕರಣಗಳು ಪತ್ತೆಯಾಗಿದ್ದು, ಸೋಮವಾರ ಒಂದೇ ದಿನ 478 ಮಂದಿ ಸತ್ತಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್ 10ರಂದು 99,181 ಸೋಂಕು ಪ್ರಕರಣಗಳು ದೃಢಪಟ್ಟಿದ್ದವು.
ಅತಿ ಹೆಚ್ಚು ಸೋಂಕು ಪ್ರಕರಣಗಳು ಕಾಣಿಸಿಕೊಂಡಿರುವ ಮಹಾರಾಷ್ಟ್ರ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಕಠಿಣ ನಿರ್ಬಂಧಗಳನ್ನು ಹೇರಲಾಗಿದೆ.
ರಾಜಸ್ಥಾನ ಸರ್ಕಾರ ರಾತ್ರಿ ವೇಳೆ ಕರ್ಫ್ಯೂ ಜಾರಿಗೊಳಿಸಿದ್ದು, ಜತೆಗೆ ಏಪ್ರಿಲ್ 5ರಿಂದ 19ರವರೆಗೆ 1ರಿಂದ 9ನೇ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.