ನವದೆಹಲಿ: ಕೋವಿಡ್-19 ಹಿನ್ನೆಲೆಯಲ್ಲಿ ತನ್ನ ಅಧೀನಕ್ಕೆ ಒಳಪಟ್ಟಿರುವ ಎಲ್ಲಾ ವಿಶ್ವವಿದ್ಯಾಲಯಗಳ ಪರೀಕ್ಷೆಗಳನ್ನು ರದ್ದುಗೊಳಿಸಲು ದೆಹಲಿ ಸರ್ಕಾರ ನಿರ್ಧರಿಸಿದೆ.
ದೆಹಲಿಯಲ್ಲಿ ಹೆಚ್ಚಾಗುತ್ತಿರುವ ಕೋವಿಡ್-19 ಪ್ರಕರಣಗಳ ಹಿನ್ನೆಲೆಯಲ್ಲಿ ಕೇಜ್ರಿವಾಲ್ ನೇತೃತ್ವದ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದ್ದು, ಅಂತಿಮ ಪರೀಕ್ಷೆಗಳನ್ನೂ ಸಹ ರದ್ದು ಮಾಡಲಾಗಿದೆ.
ವಿಶ್ವವಿದ್ಯಾಲಯಗಳು ನಿರ್ಧರಿಸುವ ಮೌಲ್ಯಮಾಪನ ನಿಯತಾಂಕಗಳನ್ನು ಆಧರಿಸಿ ವಿದ್ಯಾರ್ಥಿಗಳಿಗೆ ಪದವಿ ನೀಡಲಾಗುವುದು ಎಂದು ದೆಹಲಿ ಉಪ ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರೂ ಆಗಿರುವ ಮನೀಶ್ ಸಿಸೋಡಿಯಾ ತಿಳಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕೇಂದ್ರದ ವ್ಯಾಪ್ತಿಗೆ ಬರುವ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಿಗೆ ಇದೇ ರೀತಿಯ ನಿರ್ಧಾರ ತೆಗೆದುಕೊಳ್ಳುವಂತೆ ಕೋರಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ ಎಂದು ಸಿಸೋಡಿಯಾ ಹೇಳಿದ್ದಾರೆ.
ಇದೇ ವೇಳೆ ಕರ್ನಾಟಕದಲ್ಲಿ ಮಧ್ಯಂತರ ಸೆಮಿಸ್ಟರ್ ಪರೀಕ್ಷೆಗಳನ್ನು ಈ ವರ್ಷ ರದ್ದುಪಡಿಸಲಾಗಿದೆ. ಅಂತಿಮ ಸೆಮಿಸ್ಟರ್ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.