ನವದೆಹಲಿ: ದೇಶದಾದ್ಯಂತ ಕೋವಿಡ್–19 ಸೋಂಕಿನಿಂದ ಗುಣಮುಖರಾದವರ ಪ್ರಮಾಣ ಶೇ. 93.6ಕ್ಕೆಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇಲಾಖೆಯ ಮಾಹಿತಿ ಪ್ರಕಾರ ದೇಶದಲ್ಲಿ ಈವರೆಗೆ 90 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಈ ಪೈಕಿ 84.28 ಲಕ್ಷ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ 1.32 ಲಕ್ಷ ಸೋಂಕಿತರು ಮೃತಪಟ್ಟಿದ್ದು, ಇನ್ನೂ 4.42 ಲಕ್ಷ ಸಕ್ರಿಯ ಪ್ರಕರಣಗಳು ಇವೆ. ಗುರುವಾರ ಒಂದೇ ದಿನ 44,807 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.
ನ.19 ರವರೆಗೆ ಒಟ್ಟು 12,95,91,786 ಕೊರೊನಾ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.
ಹರಿಯಾಣದ ಆರೋಗ್ಯ ಸಚಿವರ ಮೇಲೆ ಲಸಿಕೆ ಪ್ರಯೋಗ
ಅಂಬಾಲಾ: ಭಾರತ್ ಬಯೊಟೆಕ್ ಸಂಸ್ಥೆಯು ಕೋವಿಡ್ ಚಿಕಿತ್ಸೆಗೆ ಅಭಿವೃದ್ಧಿಪಡಿಸಿರುವ ಕೊವ್ಯಾಕ್ಸಿನ್ ಲಸಿಕೆಯ ಪ್ರಯೋಗಕ್ಕೆ ಒಳಗಾಗಲು ಹರಿಯಾಣದ ಆರೋಗ್ಯ ಸಚಿವ ಅನಿಲ್ ವಿಜ್ ಅವರು ಸ್ವಯಂಪ್ರೇರಿತರಾಗಿ ಮುಂದಾಗಿದ್ದರು.
ಅಂಬಾಲಾದ ಆಸ್ಪತ್ರೆಯಲ್ಲಿ ಕೊವ್ಯಾಕ್ಸಿನ್ ಲಸಿಕೆಯನ್ನು ಅನಿಲ್ ವಿಜ್ ಅವರ ಮೇಲೆ ಯಶಸ್ವಿಯಾಗಿ ಪ್ರಯೋಗ ಮಾಡಲಾಯಿತು ಎಂದು ವರದಿಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.