ನವದೆಹಲಿ: ಕೊರೊನಾ ವೈರಾಣುವಿನ ರೂಪಾಂತರ ತಳಿ ಡೆಲ್ಟಾ ಸೋಂಕು ಗಣನೀಯ ಪ್ರಮಾಣದಲ್ಲಿಯೇ ಇದೆ, ಹೊಸ ರೂಪಾಂತರ ತಳಿ ಓಮೈಕ್ರಾನ್ ಸೋಂಕು 19 ರಾಜ್ಯಗಳಲ್ಲಿ ಪತ್ತೆಯಾಗಿದೆ. ಹಾಗಾಗಿ, ರಾಜ್ಯಗಳು ಜಾಗರೂಕವಾಗಿಯೇ ಇರಬೇಕು ಎಂದು ಕೇಂದ್ರ ಸರ್ಕಾರವು ಸೂಚಿಸಿದೆ. ಹಬ್ಬದ ಸಂದರ್ಭದಲ್ಲಿ ಜನದಟ್ಟಣೆ ಯನ್ನು ನಿಯಂತ್ರಿಸುವುದಕ್ಕಾಗಿ ಅಗತ್ಯದ ಆಧಾರದಲ್ಲಿ ಸ್ಥಳೀಯವಾಗಿ ನಿರ್ಬಂಧ ಅಥವಾ ನಿಷೇಧಗಳನ್ನು ಹೇರಬಹುದು ಎಂದು ಸಲಹೆ ಮಾಡಿದೆ.
ನಿರ್ಬಂಧಗಳ ಬಗ್ಗೆ ಹೊರಡಿಸಲಾಗಿದ್ದ ಅಧಿಸೂಚನೆಯ ಸಿಂಧುತ್ವವನ್ನು 2022ರ ಜನವರಿ 31ರವರೆಗೆ ಕೇಂದ್ರ ಗೃಹ ಸಚಿವಾಲಯವು ವಿಸ್ತರಿಸಿದೆ.
ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಪತ್ರ ಬರೆದಿದ್ದಾರೆ.ಮಾಸ್ಕ್ ಧರಿಸುವಿಕೆ, ಅಂತರ ಕಾಯ್ದುಕೊಳ್ಳುವಿಕೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಭಲ್ಲಾ ಸೂಚಿಸಿದ್ದಾರೆ.
ಮಾಹಿತಿ ಪಡೆದ ಆಯೋಗ
ವಿಧಾನಸಭೆಗೆ ಚುನಾವಣೆ ನಡೆಯಲಿರುವ ಐದು ರಾಜ್ಯಗಳಲ್ಲಿನ ಕೋವಿಡ್ ಪರಿಸ್ಥಿತಿಯ ಬಗ್ಗೆ ಚುನಾವಣಾ ಆಯೋಗವು ಸೋಮವಾರ ಮಾಹಿತಿ ಪಡೆದುಕೊಂಡಿದೆ. ಕೇಂದ್ರ ಆರೋಗ್ಯ ಕಾರ್ಯದರ್ಶಿರಾಜೇಶ್ ಭೂಷಣ್ ಅವರು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಮತ್ತು ಇಬ್ಬರು ಆಯುಕ್ತರಾದ ರಾಜೀವ್ ಕುಮಾರ್ ಮತ್ತು ಅನೂಪ್ ಚಂದ್ರ ಪಾಂಡೆ ಅವರಿಗೆ ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಗೋವಾ ಮತ್ತು ಮಣಿಪುರದ ಕೋವಿಡ್ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಿದರು. ಚುನಾವಣೆಯನ್ನು ಮುಂದೂಡುವ ಬಗ್ಗೆ ಆಯೋಗವು ಈ ವರೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಮೂಲಗಳು ಹೇಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.