ನವದೆಹಲಿ: ಮಹಾರಾಷ್ಟ್ರದಲ್ಲಿ ಕೋವಿಡ್–19 ಪರಿಸ್ಥಿತಿ ನಿರ್ವಹಣೆಯ ನ್ಯೂನತೆಗಳನ್ನು ಪಟ್ಟಿ ಮಾಡಿರುವ ಕೇಂದ್ರ ಆರೋಗ್ಯ ಸಚಿವಾಲಯ, ಗಂಭೀರ ಪರಿಸ್ಥಿತಿ ಎದುರಿಸಲು ಸನ್ನದ್ಧವಾಗಿರಬೇಕು ಹಾಗೂ ಹೆಚ್ಚು ಬಾಧಿತವಾಗಿರುವ ಜಿಲ್ಲೆಗಳಲ್ಲಿ ಲಸಿಕೆ ಅಭಿಯಾನವನ್ನು ತ್ವರಿತಗೊಳಿಸಬೇಕು ಎಂದು ಸಲಹೆ ಮಾಡಿದೆ.
ರಾಜ್ಯದಲ್ಲಿ ಸೋಂಕು ಪ್ರಕರಣಗಳು ಕಳೆದ ತಿಂಗಳು ಶೇ 171ರಷ್ಟು ವೃದ್ಧಿಯಾಗಿದೆ. ಲಸಿಕೆ ನೀಡುವುದುನ್ನು ಚುರುಕುಗೊಳಿಸುವ ಜೊತೆಗೆ ಎಂಟು ಜಿಲ್ಲೆಗಳತ್ತ ಹೆಚ್ಚಿನ ಗಮನ ಕೇಂದ್ರೀಕರಿಸಿ ಸೋಂಕು ಹರಡುವಿಕೆ ತಡೆಯಲು ಆದ್ಯತೆ ನೀಡಬೇಕು ಎಂದು ಹೇಳಿದೆ.
ಕೋವಿಡ್ ಎರಡನೇ ಅಲೆ ಆರಂಭವಾಗಬಹುದು ಎಂಬ ಆತಂಕವು ದಟ್ಟವಾಗುತ್ತಿರುವ ಹಿಂದೆಯೇ ಕೇಂದ್ರ ಆರೋಗ್ಯ ಸಚಿವಾಲಯ, ಕಟ್ಟು ನಿಟ್ಟಿನ ಕ್ರಮಕ್ಕೆ ಸಲಹೆ ಮಾಡಿದೆ. ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದ ಲಾಕ್ಡೌನ್ ಪರಿಣಾಮಗಳು ಸೀಮಿತವಾಗಿದೆ ಎಂದಿದೆ. ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿ ಸೀತಾರಾಂ ಕುಂಟೆ ಅವರಿಗೆ ಮೂರು ದಿನಗಳಲ್ಲಿ ಎರಡು ಪತ್ರ ಬರೆದಿರುವ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್, ಮಹಾರಾಷ್ಟ್ರಕ್ಕೆ ಮಾರ್ಚ್ 7–14ರ ಅವಧಿಯಲ್ಲಿ ಭೇಟಿ ನೀಡಿದ್ದ ಕೇಂದ್ರ ತಂಡದ ವರದಿಯನ್ನು ಉಲ್ಲೇಖಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.