ADVERTISEMENT

ಮುರ್ಶಿದಾಬಾದ್‌ ಹಿಂಸಾಚಾರ: ನ್ಯಾಯಾಂಗ ತನಿಖೆಗೆ ಸಿಪಿಐ(ಎಂ) ಆಗ್ರಹ

ಪಿಟಿಐ
Published 20 ಏಪ್ರಿಲ್ 2025, 12:54 IST
Last Updated 20 ಏಪ್ರಿಲ್ 2025, 12:54 IST
<div class="paragraphs"><p>ಸಿಪಿಐ(ಎಂ)</p></div>

ಸಿಪಿಐ(ಎಂ)

   

ಕೋಲ್ಕತ್ತ: ಪಶ್ಚಿಮ ಬಂಗಾಳದ ಮುರ್ಶಿದಾಬಾದ್‌ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕೆಂದು ಸಿಪಿಐ(ಎಂ) ಆಗ್ರಹಿಸಿದೆ.

2026ರ ವಿಧಾನಸಭೆ ಚುನಾವಣೆಗೂ ಮುನ್ನ ರಾಜಕೀಯ ಲಾಭಕ್ಕಾಗಿ ಹಿಂಸಾಚಾರವನ್ನು ನಡೆಸಲು ಆಡಳಿತಾರೂಢ ಟಿಎಂಸಿ ಮತ್ತು ವಿರೋಧ ಪಕ್ಷ ಬಿಜೆಪಿ ಒಪ್ಪಂದ ಮಾಡಿಕೊಂಡಿವೆ ಎಂದು ಆರೋಪಿಸಿದೆ.

ADVERTISEMENT

ಕೋಲ್ಕತ್ತದ ಬ್ರಿಗೇಡ್‌ ಪೆರೇಡ್‌ ಮೈದಾನದಲ್ಲಿ ನಡೆದ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ರಾಜ್ಯ ಕಾರ್ಯದರ್ಶಿ ಮೊಹಮ್ಮದ್‌ ಸಲೀಂ, ‘ನಿರುದ್ಯೋಗ, ಬೆಲೆ ಏರಿಕೆ ಮತ್ತು ಭ್ರಷ್ಟಾಚಾರದಂತಹ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಎರಡೂ (ಟಿಎಂಸಿ, ಬಿಜೆಪಿ) ಪಕ್ಷಗಳು ಸ್ಪರ್ಧಾತ್ಮಕ ಕೋಮುವಾದದಲ್ಲಿ ತೊಡಗಿವೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

‘ಸತ್ಯವನ್ನು ಹೊರ ತರಲು ಮುರ್ಶಿದಾಬಾದ್‌ ಹಿಂಸಾಚಾರ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ನಾವು ಒತ್ತಾಯಿಸುತ್ತೇವೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜನರಿಗೆ ದ್ರೋಹ ಬಗೆದಿದೆ. ವಕ್ಫ್‌ (ತಿದ್ದುಪಡಿ) ಕಾಯ್ದೆ ವಿರುದ್ಧ ದೇಶದಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಆದರೆ, ಮುರ್ಶಿದಾಬಾದ್‌ ಹೊರತುಪಡಿಸಿ ಎಲ್ಲಿಯೂ ಗಲಭೆಗಳು ನಡೆದಿಲ್ಲ. ಇದು ಗಂಭೀರ ಪ್ರಶ್ನೆಗಳನ್ನು ಹುಟ್ಟು ಹಾಕುತ್ತದೆ’ ಎಂದು ಅವರು ಹೇಳಿದ್ದಾರೆ.

ಏಪ್ರಿಲ್ 11 ಮತ್ತು 12 ರಂದು ಮುರ್ಶಿದಾಬಾದ್‌ನ ಸುತಿ, ಧುಲಿಯನ್ ಮತ್ತು ಜಂಗೀಪುರ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ವಕ್ಫ್‌ (ತಿದ್ದುಪಡಿ) ಕಾಯ್ದೆ ವಿರುದ್ಧದ ಪ್ರತಿಭಟನೆಗಳ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.