ಸಿಲಿಗುರಿ, ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದಲ್ಲಿನ ಚುನಾವಣೋತ್ತರ ಗಲಭೆಗಳು, ಶಾಲಾ ಸೇವೆ ಆಯೋಗದಿಂದ ನಡೆದ ಶಿಕ್ಷಕರ ನೇಮಕಾತಿ ಹಗರಣ ಸೇರಿದಂತೆ ವಿವಿಧ ಪ್ರಕರಣಗಳ ಕುರಿತು ಸಿಬಿಐ ತನಿಖೆಗೆ ಆದೇಶಿಸಿದ ನ್ಯಾಯಾಂಗದ ಬಗ್ಗೆ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದಕ್ಕೆ ಭಾನುವಾರ ಪ್ರತಿಕ್ರಿಯಿಸಿದ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನಕರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ಸಿಬಿಐ ತನಿಖೆಗೆ ಆದೇಶಿಸಿದ ನ್ಯಾಯಾಂಗದ ಟೀಕೆ ಮಾಡಿ, ಬ್ಯಾನರ್ಜಿ ಅವರು ಎಲ್ಲೆ ಮೀರಿದ್ದಾರೆ. ಈ ಸಂಬಂಧ ರಾಜ್ಯದ ಮುಖ್ಯ ಕಾರ್ಯದರ್ಶಿ ಅವರು ತ್ವರಿತವಾಗಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಭಾನುವಾರ ಡಾರ್ಜಿಲಿಂಗ್ಗೆ ತೆರಳುವ ವೇಳೆ ಬಾಗಡೋಗರ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, 'ರಾಜ್ಯದಲ್ಲಿ ಸಾಂವಿಧಾನಿಕ ಸಂಸ್ಥೆಗಳು ದಾಳಿಗೊಳಗಾಗುತ್ತಿವೆ. ನ್ಯಾಯಾಂಗದ ಮೇಲಿನ ದಾಳಿಯು ಖಂಡನಾರ್ಹ' ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.