ಭುವನೇಶ್ವರ: ಒಡಿಶಾದಲ್ಲಿ ಚಂಡಮಾರುತ ಅಂಫಾನ್ ಪ್ರಭಾವ ಬೀರುವ ಸಾಧ್ಯತೆಗಳಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ 12 ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ಮುಖ್ಯ ಕಾರ್ಯದರ್ಶಿ ಅಸಿತ್ ತ್ರಿಪಾಠಿ ನೇತೃತ್ವದಲ್ಲಿ ನಡೆದ ಪರಿಶೀಲನಾ ಸಭೆಯ ಬಳಿಕ ಶುಕ್ರವಾರ ಈ ತೀರ್ಮಾನ ಕೈಗೊಳ್ಳಲಾಗಿದೆ.
ಕೋವಿಡ್–19 ಪರಿಸ್ಥಿತಿಯನ್ನು ನಿಯಂತ್ರಿಸುವ ಜೊತೆಗೆ ಚಂಡಮಾರುತದಿಂದ ಉಂಟಾಗುವ ಎಂಥದ್ದೇ ಪರಿಣಾಮ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.
'ಪ್ರಸ್ತುತ ಚಂಡಮಾರುತ ಸಾಗುವ ಮಾರ್ಗದ ಬಗ್ಗೆ ಸ್ಪಷ್ಟತೆ ಇಲ್ಲ. ಆದರೆ, ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆಯ ಪ್ರಕಾರ ರಾಜ್ಯ ಸರ್ಕಾರ ಚಂಡಮಾರುತ ಪರಿಣಾಮಗಳನ್ನು ಎದುರಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ' ಎಂದು ವಿಶೇಷ ಪರಿಹಾರಗಳ ಹೊಣೆ ವಹಿಸಿರುವಕಮಿಷನರ್ ಪ್ರದೀಪ್ ಜೇನ ಹೇಳಿದ್ದಾರೆ.
ಒಡಿಶಾ ಉತ್ತರ ಭಾಗದ ಕರಾವಳಿ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪರಿಸ್ಥಿತಿಯನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸುವಂತೆ ಸೂಚಿಸಲಾಗಿದೆ. ಚಂಡಮಾರುತದಿಂದ ಹಾನಿ ಉಂಟಾದರೆ, ಆಶ್ರಯಕ್ಕಾಗಿ ಕಟ್ಟಡಗಳನ್ನು ಗುರುತಿಸುವಂತೆ ತಿಳಿಸಲಾಗಿದೆ. ಬಹುತೇಕ ಆಶ್ರಯ ಕಟ್ಟಡಗಳನ್ನು ಕೋವಿಡ್–19 ಕ್ವಾರಂಟೈನ್ ಕೇಂದ್ರಗಳಾಗಿ ಬಳಕೆ ಮಾಡಲಾಗುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.