ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ ಕ್ಯಾರ್ ಚಂಡಮಾರುತವು ಗೋವಾ ಮತ್ತು ಕರಾವಳಿ ಕರ್ನಾಟಕದಲ್ಲಿ ಮುಂದಿನ 12–36 ಗಂಟೆಗಳಲ್ಲಿ ಭಾರಿ ಪ್ರಮಾಣದ ಮಳೆ ಉಂಟು ಮಾಡಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕ್ಯಾರ್ ಅಬ್ಬರದ ಹಿನ್ನೆಲೆಯಲ್ಲಿ ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಗೋವಾದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಕ್ಯಾರ್ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿದೆ. ಶುಕ್ರವಾರ ರಾತ್ರಿ ಪಶ್ಚಿಮ ಕರಾವಳಿಯ ರತ್ನಗಿರಿಯಿಂದ 200 ಕಿ.ಮೀ ದೂರದಲ್ಲಿ ಮತ್ತು ಮುಂಬೈನಿಂದ 310 ಕಿ.ಮೀ ದೂರದಲ್ಲಿತ್ತು.
ಚಂಡಮಾರುತವು ಪಶ್ಚಿಮ-ವಾಯುವ್ಯ ದಿಕ್ಕಿನ ಮೂಲಕ ಒಮಾನ್ ಕರಾವಳಿ ಪ್ರವೇಶಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಂಡಮಾರುತದ ಪರಿಣಾಮವಾಗಿ ಗಂಟೆಗೆ 110 ರಿಂದ 130 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮಳೆಯೊಂದಿಗೇ ಸುಳಿಗಾಳಿಯೂ ಇರಲಿದೆ ಎನ್ನಲಾಗಿದೆ.
ಕರ್ನಾಟಕ, ಗೋವಾ ಮಾತ್ರವಲ್ಲದೇ, ಮಹಾರಾಷ್ಟ್ರದ ಕೆಲ ಜಿಲ್ಲೆ ಮತ್ತು ಗುಜರಾತ್ನಲ್ಲಿಯೂ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಅದಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.