
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ 'ಮೊಂಥಾ' ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿರುವುದಾಗಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
(ಪಿಟಿಐ ಚಿತ್ರ)
ಅಮರಾವತಿ/ಭುವನೇಶ್ವರ: ಮೊಂಥಾ ಚಂಡಮಾರುತವು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮಂಗಳವಾರ ರಾತ್ರಿ ಹೊತ್ತಿಗೆ ಆಂಧ್ರ ಪ್ರದೇಶದ ಮಚಲಿಪಟ್ಟಣ ಮತ್ತು ಕಾಕಿನಾಡ ನಡುವೆ ಅಪ್ಪಳಿಸಬಹುದು ಎಂದು ಅಂದಾಜಿಸಲಾಗಿದೆ. ಗಾಳಿಯ ವೇಗವು ಗಂಟೆಗೆ 110 ಕಿ.ಮೀನಷ್ಟು ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಆಂಧ್ರ ಪ್ರದೇಶ ಮತ್ತು ಒಡಿಶಾದ ಮೇಲೆಯೇ ಚಂಡಮಾರುತವು ಹೆಚ್ಚು ಪರಿಣಾಮ ಬೀರಲಿದೆ. ಆದ್ದರಿಂದ, ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮುನ್ನೆಚ್ಚರಿಕಾ ಕ್ರಮಗಳ ಪರಿಶೀಲನೆ ನಡೆಸಿದರು. ‘ಯಾವುದೇ ಸಾವು ನೋವು ಸಂಭವಿಸದಂತೆ ನೋಡಿಕೊಳ್ಳುವುದೇ ಸರ್ಕಾರದ ಗುರಿ’ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ ಹೇಳಿದರು.
ತೀವ್ರ ಮಳೆಯಾಗುವ ಪ್ರದೇಶಗಳು ಮತ್ತು ತಗ್ಗು ಪ್ರದೇಶಗಳ ಜನರನ್ನು ಸ್ಥಳಾಂತರಿಸುವ ಕಾರ್ಯವನ್ನು ಈ ರಾಜ್ಯಗಳಲ್ಲಿ ನಡೆಸಲಾಗುತ್ತಿದೆ. ಶಾಲೆಗಳು, ಅಂಗನವಾಡಿಗಳಿಗೆ ಅ.30ರವರೆಗೆ ಇಲ್ಲಿ ರಜೆ ಘೋಷಿಸಲಾಗಿದೆ. ನೂರಾರು ಶಾಲೆಗಳನ್ನು ನಿರಾಶ್ರಿತ ಶಿಬಿರಗಳನ್ನಾಗಿ ಪರಿವರ್ತಿಸಲಾಗಿದೆ.
ಆಂಧ್ರದ ನೆಲ್ಲೂರು ಜಿಲ್ಲೆಯ ಸುತ್ತಮುತ್ತಲ ಜಿಲ್ಲೆಗಳಲ್ಲಿ ಮಂಗಳವಾರ ಬೆಳಿಗ್ಗೆಯಿಂದಲೇ ಮಳೆ ಸುರಿದಿದೆ. ಒಡಿಶಾದ ಎಂಟು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಮೊಂಥಾ ಪರಿಣಾಮವು ರಾಜಸ್ಥಾನದವರೆಗೂ ಹಬ್ಬಿಕೊಂಡಿದ್ದು, ಬೂಂದಿ ಜಿಲ್ಲೆಯಲ್ಲಿ 13 ಸೆಂ.ಮೀ ಮಳೆ ಸುರಿದಿದೆ. ಅ.13ರಂದು ಪಶ್ಚಿಮ ಬಂಗಾಳದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.