ಚೆನ್ನೈ: ‘ನಿವಾರ್’ ಚಂಡಮಾರುತ ಹಿನ್ನೆಲೆಯಲ್ಲಿತಮಿಳುನಾಡಿನಲ್ಲಿ ಒಟ್ಟು 24 ಸಾವಿರ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದ್ದು 987 ನಿರಾಶ್ರಿತರ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ತಮಿಳುನಾಡು ಸರ್ಕಾರ ತಿಳಿಸಿದೆ.
ಬಂಗಾಳ ಕೊಲ್ಲಿಯ ನೈರುತ್ಯ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಮಂಗಳವಾರ ಚಂಡಮಾರುತದ ಸ್ವರೂಪ ಪಡೆದಿದೆ. 130-140 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು ಬುಧವಾರದ ಸಂಜೆ ಅಥವಾ ಗುರುವಾರ ಬೆಳಗ್ಗೆ ನಿವಾರ್ ಚಂಡಮಾರುತ ಚೆನ್ನೈ ಮತ್ತು ಪುದುಚೇರಿಯನ್ನು ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮಂಗಳವಾರ ರಾತ್ರಿಯೇ ತಮಿಳುನಾಡು ಮತ್ತು ಪುದುಚೇರಿಯ ಹಲವೆಡೆ ಮಳೆಯಾಗಿದ್ದು, ಬುಧವಾರವು ಮಳೆ ಮುಂದುವರೆದಿದ್ದು ಚೆನ್ನೈ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಹಲವು ರಸ್ತೆಗಳು ಮತ್ತು ತಗ್ಗು ಪ್ರದೇಶಗಳು ಈಗಾಗಲೇ ಜಲಾವೃತವಾಗಿವೆ.
ಕಡ್ಲೂರು, ಚಿದಂಬರಂ, ಚೆನ್ನೈ ಸೇರಿದಂತೆ ಕರಾವಳಿ ಸಮೀಪದ 10 ಹೆಚ್ಚು ಜಿಲ್ಲೆಗಳಲ್ಲಿ ಚಂಡಮಾರುತ ತೀವ್ರ ಪರಿಣಾಮ ಬೀರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತದ ಎಲ್ಲಾ ಪರಿಸ್ಥಿತಿಗಳನ್ನು ಎದುರಿಸಲು ಸರ್ಕಾರದ ವಿಪತ್ತು ನಿರ್ವಹಣಾ ಪಡೆ, ಅರೆಸೇನಾ ಪಡೆಗಳು ಸೇರಿದಂತೆ ವಿವಿಧ ಸಂಸ್ಥೆಗಳು ಸಜ್ಜಾಗಿವೆ ಎಂದು ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.