ಭುವನೇಶ್ವರ: ದನ ಕೊಂದ ಆರೋಪದ ಮೇಲೆ 35 ವರ್ಷದ ದಲಿತ ವ್ಯಕ್ತಿಯ ಮೇಲೆ ಗುಂಪೊಂದು ಹಲ್ಲೆ ನಡೆಸಿದ್ದು, ಅವರು ಮೃತಪಟ್ಟಿದ್ದಾರೆ. ಹಲ್ಲೆಗೆ ಒಳಗಾದ ಮತ್ತೊಬ್ಬ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದಾರೆ.
‘ಒಡಿಶಾದ ದೇವಗಢ ಜಿಲ್ಲೆಯ ರಿಯಾಮಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಂದೈಜುರಿ ಗ್ರಾಮದಲ್ಲಿ ಬುಧವಾರ ಈ ಘಟನೆ ನಡೆದಿದ್ದು, ಆರು ಮಂದಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ವ್ಯಕ್ತಿಯನ್ನು ಕಿಶೋರ್ ಚಮ್ಮಾರ್, ಅವರ ಸಹವರ್ತಿ ಗೌತಮ್ ನಾಯಕ್ ಎಂದು ಗುರುತಿಸಲಾಗಿದೆ. ಇಬ್ಬರೂ ನೆರೆಯ ಗ್ರಾಮಸ್ಥರಾಗಿದ್ದು, ಹತ್ಯೆ ಮಾಡಿದ ಹಸುವಿನ ಚರ್ಮ ತೆಗೆಯುವ ಕೆಲಸ ಮಾಡುತ್ತಿದ್ದರು.
‘ಗ್ರಾಮದ ಸಮೀಪದ ಕಾಡಿನಲ್ಲಿ ಇಬ್ಬರೂ ಹಸುವಿನ ಮಾಂಸ ಕಡಿಯುತ್ತಿದ್ದುದನ್ನು ಗ್ರಾಮಸ್ಥರು ಗಮನಿಸಿದ್ದಾರೆ. ಸ್ಥಳದಲ್ಲಿಯೇ ಅದರ ತಲೆಯೂ ಸಿಕ್ಕಿತ್ತು. ದನ ಸತ್ತ ಬಳಿಕವೇ ಅದರ ಮಾಂಸವನ್ನು ಕತ್ತರಿಸುತ್ತಿರುವುದಾಗಿ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ಆದರೂ, ಗುಂಪೊಂದು ಏಕಾಏಕಿ ದಾಳಿ ನಡೆಸಿದ್ದು, ಕಿಶೋರ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗೌತಮ್ ಗಾಯಗೊಂಡಿದ್ದು, ಅಲ್ಲಿಂದ ಪರಾರಿಯಾಗಿದ್ದಾರೆ’ ಎಂದು ದೇವಗಢ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.
‘ಪ್ರಕರಣದ ಸಂಬಂಧ ಆರು ಮಂದಿಯನ್ನು ಬಂಧಿಸಲಾಗಿದೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.