ಸಾಂದರ್ಭಿಕ ಚಿತ್ರ
– ಎ.ಐ ಚಿತ್ರ
ಬಲಿಯಾ (ಉತ್ತರ ಪ್ರದೇಶ): ಕಲ್ಯಾಣ ಮಂಟಪದಲ್ಲಿ ದಲಿತ ಕುಟುಂಬದ ವಿವಾಹ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ಆಕ್ರೋಶಗೊಂಡ ಗುಂಪೊಂದು, ಕಲ್ಯಾಣ ಮಂಟಪಕ್ಕೆ ನುಗ್ಗಿ ದಲಿತ ಕುಟುಂಬದ ಸದಸ್ಯರನ್ನು ದೊಣ್ಣೆ ಮತ್ತು ರಾಡ್ಗಳಿಂದ ಮನ ಬಂದಂತೆ ಥಳಿಸಿರುವ ಘಟನೆ ಉತ್ತರ ಪ್ರದೇಶದ ರಸಢಾ ಪಟ್ಟಣದಲ್ಲಿ ನಡೆದಿದೆ.
ಈ ಘಟನೆ ಶುಕ್ರವಾರ ನಡೆದಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
‘ದಲಿತ ಸಮುದಾಯಕ್ಕೆ ಸೇರಿದವರಾದ ನೀವು, ಹೇಗೆ ಕಲ್ಯಾಣ ಮಂಟಪದಲ್ಲಿ ವಿವಾಹ ಕಾರ್ಯಕ್ರಮ ನಡೆಸುತ್ತಿದ್ದೀರಿ ಎಂದು ಪ್ರಶ್ನಿಸಿ ನಮ್ಮನ್ನು ಥಳಿಸಿದರು’ ಎಂದು ದಲಿತ ಕುಟುಂಬದವರು ದೂರು ದಾಖಲಿಸಿದ್ದಾರೆ. ಈ ಸಂಬಂಧ ಎಫ್ಐಆರ್ ದಾಖಲಾಗಿದೆ.
‘ಕಲ್ಯಾಣ ಮಂಟಪದಲ್ಲಿ ವಿವಾಹವು ಆಯೋಜನೆಗೊಂಡಿತ್ತು. ಬೆಳಿಗ್ಗೆ 10.30ರ ಸುಮಾರಿಗೆ 20 ಜನರ ಗುಂಪು ಏಕಾಏಕಿ ದಾಳಿ ಮಾಡಿ, ಹಿಗ್ಗಾ ಮಗ್ಗ ಥಳಿಸಿದರು’ ಎಂದು ಸಂತ್ರಸ್ತರೊಬ್ಬರ ಸಹೋದರ ರಾಘವೇಂದ್ರ ಗೌತಮ್ ದೂರು ನೀಡಿದ್ದಾರೆ.
ದೂರಿನ ಮೇರೆಗೆ ಭಾರತೀಯ ನ್ಯಾಯ ಸಂಹಿತೆ ಮತ್ತು ಎಸ್.ಸಿ, ಎಸ್.ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲಿಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.