ಅರವಿಂದ ಕೇಜ್ರಿವಾಲ್ ನಿವಾಸದ ಮುಂದೆ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಪಿಟಿಐ ಚಿತ್ರ
ನವದೆಹಲಿ: ನವದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ನೋಂದಣಿ ಕುರಿತು ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿ ದೆಹಲಿ ಬಿಜೆಪಿ ಕಾರ್ಯಕರ್ತರು ಇಂದು (ಶುಕ್ರವಾರ) ಪ್ರತಿಭಟನೆ ನಡೆಸಿದ್ದಾರೆ.
ಕೇಜ್ರಿವಾಲ್ ಅವರ ನಿವಾಸದ ಎದುರು ನೂರಾರು ಬಿಜೆಪಿ ಪ್ರತಿಭಟನಾಕಾರರು ಜಮಾಯಿಸಿದ್ದು, ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು. ಪೊಲೀಸರು ಅಳವಡಿಸಿದ್ದ ಬ್ಯಾರಿಕೇಡ್ಗಳನ್ನು ದಾಟಲು ಯತ್ನಿಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಜಲಫಿರಂಗಿಗಳನ್ನು ಪ್ರಯೋಗಿಸಿದ್ದಾರೆ.
ದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯನ್ನು ಬಿಜೆಪಿ ದುರ್ಬಳಕೆ ಮಾಡಿಕೊಂಡಿದೆ. ಉತ್ತರ ಪ್ರದೇಶ, ಬಿಹಾರದ ಮತ್ತು ಇತರ ನೆರೆಯ ರಾಜ್ಯಗಳ ಜನರನ್ನು ಮತದಾರರ ಪಟ್ಟಿಗೆ ಸೇರಿಸಲು ಪ್ರಯತ್ನಿಸಿದೆ. ಡಿಸೆಂಬರ್ 15 ರಿಂದ ಜನವರಿ 8ರ ನಡುವೆ ಸುಮಾರು 13,000 ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಲು ಅರ್ಜಿ ಸಲ್ಲಿಸಲಾಗಿದೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ಕೇಜ್ರಿವಾಲ್ ದೂರು ಸಲ್ಲಿಸಿದ್ದರು.
70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ಮತದಾನ ನಡೆಯಲಿದ್ದು, ಫೆ. 8ಕ್ಕೆ ಮತ ಎಣಿಕೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.