ADVERTISEMENT

ದೆಹಲಿ ಚುನಾವಣೆ: 3ನೇ ಬಾರಿಗೆ ಎಎಪಿ ಸರ್ಕಾರ ರಚಿಸಲಿದೆ ಎಂದ ಅರವಿಂದ ಕೇಜ್ರಿವಾಲ್

ಏಜೆನ್ಸೀಸ್
Published 8 ಫೆಬ್ರುವರಿ 2020, 7:28 IST
Last Updated 8 ಫೆಬ್ರುವರಿ 2020, 7:28 IST
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕುಟುಂಬದವರೊಂದಿಗೆ ಮತ ಚಲಾಯಿಸಿದರು.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕುಟುಂಬದವರೊಂದಿಗೆ ಮತ ಚಲಾಯಿಸಿದರು.   

ನವದೆಹಲಿ: ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷವು ಗೆಲುವು ಸಾಧಿಸಲಿದ್ದು, ಮೂರನೇ ಬಾರಿಗೆ ಸರ್ಕಾರ ರಚಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿಶ್ವಾಸ ವ್ಯಕ್ತಪಡಿಸಿದರು.

ಉತ್ತರ ದೆಹಲಿಯ ಸಿವಿಲ್ ಲೈನ್ಸ್‌ನಲ್ಲಿ ಕುಟುಂಬದೊಂದಿಗೆ ತೆರಳಿ ಮತ ಚಲಾಯಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ದೆಹಲಿಯಲ್ಲಿ ನಮ್ಮ ಸರ್ಕಾರ ಮಾಡಿರುವ ಕೆಲಸಗಳ ಆಧಾರದ ಮೇಲೆ ಜನರು ನಮಗೆ ಮತ ನೀಡುತ್ತಾರೆ ಎಂಬ ಭರವಸೆಯಿದೆ ಮತ್ತು ಮೂರನೇ ಬಾರಿಗೆ ಎಎಪಿ ಸರ್ಕಾರ ರಚಿಸಲಿದೆ ಎಂದು ಹೇಳಿದರು.

ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಕೇಜ್ರಿವಾಲ್ ಅವರ ವಿರುದ್ಧ ಬಿಜೆಪಿಯು ಪಕ್ಷದ ದೆಹಲಿ ಘಟಕದ ಯುವ ಮೋರ್ಚಾ ಅಧ್ಯಕ್ಷ ಸುನಿಲ್‌ ಯಾದವ್‌ ಅವರನ್ನು ಕಣಕ್ಕೆ ಇಳಿಸಿದೆ. ಕಾಂಗ್ರೆಸ್‌ನಿಂದ ರೊಮೇಶ್‌ ಸಬರವಾಲ್‌ ಅವರನ್ನು ಕಣಕ್ಕಿಳಿಸಲಾಗಿದೆ.

ADVERTISEMENT

ಇಂದು ಮುಂಜಾನೆ ಟ್ವೀಟ್ ಮಾಡಿದ್ದ ಕೇಜ್ರಿವಾಲ್, ‘ಎಲ್ಲರೂ ತಪ್ಪದೆ ಮತ ಚಲಾಯಿಸಿ.ವಿಶೇಷವಾಗಿ ಮಹಿಳೆಯರು ಇಂದು ಮತ ಚಲಾಯಿಸುವಂತೆಮನವಿ ಮಾಡುತ್ತೇನೆ ಎಂದು ಮನವಿ ಮಾಡಿಕೊಂಡಿದ್ದರು.
ಮತ ಚಲಾಯಿಸಲು ಪತ್ನಿ ಸುನೀತಾ ಕೇಜ್ರಿವಾಲ್, ತಾಯಿ ಮತ್ತು ಪುತ್ರನೊಂದಿಗೆ ಆಗಮಿಸಿ ಮತ ಚಲಾಯಿಸಿದರು.

ಎಎಪಿ ಎಲ್ಲ 70 ಕ್ಷೇತ್ರಗಳಲ್ಲೂಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿಯು 67 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಇನ್ನುಳಿದ ಮೂರು ಕ್ಷೇತ್ರಗಳಲ್ಲಿ ಎರಡು ಜೆಡಿಯುಗೆ 2 ಮತ್ತು ಎಲ್‌ಜೆಪಿಗೆ 1 ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದೆ. ಕಾಂಗ್ರೆಸ್ 66 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು, ನಾಲ್ಕು ಕ್ಷೇತ್ರಗಳನ್ನು ಮೈತ್ರಿ ಪಕ್ಷ ಆರ್‌ಜೆಡಿಗೆ ಬಿಟ್ಟುಕೊಟ್ಟಿದೆ.

ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಇಂದು ಮುಂಜಾನೆ 8ಗಂಟೆಯಿಂದ ಮತದಾನ ಆರಂಭವಾಗಿದೆ. ಮತ ಎಣಿಕೆ ಕಾರ್ಯ ಫೆಬ್ರುವರಿ 11ರಂದು ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.