ADVERTISEMENT

ನಟಿ ಕಂಗನಾ ರನೌತ್‌ ವಿರುದ್ಧ ನ್ಯಾಯಾಂಗ ತನಿಖೆಗೆ ಬಿಜೆಪಿ ನಾಯಕ ಒತ್ತಾಯ

ಪಿಟಿಐ
Published 12 ನವೆಂಬರ್ 2021, 11:19 IST
Last Updated 12 ನವೆಂಬರ್ 2021, 11:19 IST
ಬಾಲಿವುಡ್‌ ನಟಿ ಕಂಗನಾ ರನೌತ್‌
ಬಾಲಿವುಡ್‌ ನಟಿ ಕಂಗನಾ ರನೌತ್‌   

ನವದೆಹಲಿ: ‘ಭಾರತಕ್ಕೆ 2014ರಲ್ಲಿ ನಿಜವಾದ ಸ್ವಾತಂತ್ರ್ಯ ಸಿಕ್ಕಿದೆ. 1947ರಲ್ಲಿ ಸಿಕ್ಕಿದ್ದು ಭಿಕ್ಷೆ‘ ಎಂದು ಹೇಳಿಕೆ ನೀಡಿರುವ ಬಾಲಿವುಡ್‌ ನಟಿ ಕಂಗನಾ ರನೌತ್‌ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ದೆಹಲಿ ಬಿಜೆಪಿ ನಾಯಕ ಪ್ರವೀಣ್ ಶಂಕರ್ ಕಪೂರ್, ಕಂಗನಾ ವಿರುದ್ಧ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದಾರೆ.

ಕಂಗನಾರ ಈ ಹೇಳಿಕೆಯು 'ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಕ್ಕೆ ಮಾಡಿದ ಅವಮಾನ' ಎಂದು ದೂರಿದ್ದಾರೆ.

'ಸ್ವಾತಂತ್ರ್ಯ ಹೋರಾಟಗಾರರ ಮಗನಾಗಿ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದಿಂದ ಬಂದ ನನಗೆ, 'ಭಾರತಕ್ಕೆ 1947ರಲ್ಲಿ ಸಿಕ್ಕಿದ ಸ್ವಾತಂತ್ರ್ಯ ಭಿಕ್ಷೆ' ಎಂದಿರುವ ಕಂಗನಾರ ಹೇಳಿಕೆಯು, ಸ್ವಾತಂತ್ರ್ಯದ ಅತಿದೊಡ್ಡ ದುರುಪಯೋಗ ಮತ್ತು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಕ್ಕೆ ಮಾಡಿದ ಅವಮಾನ. ಭಾರತದ ನ್ಯಾಯಾಂಗ ವ್ಯವಸ್ಥೆಯು ಇದನ್ನು ಗಮನಿಸಬೇಕು' ಎಂದು ಕಪೂರ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ADVERTISEMENT

ಬಳಿಕ ಪಿಟಿಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, 'ಟ್ವೀಟ್ ಮಾಡಿರುವುದು ನನ್ನ ವೈಯಕ್ತಿಕ ಅಭಿಪ್ರಾಯ' ಎಂದು ತಿಳಿಸಿದರು.

ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗ 'ಭಾರತಕ್ಕೆ 2014ರಲ್ಲಿ ನಿಜವಾದ ಸ್ವಾತಂತ್ರ್ಯ ಸಿಕ್ಕಿದೆ. ಆದರೆ, 1947ರಲ್ಲಿ ದೇಶಕ್ಕೆ ಸಿಕ್ಕಿದ್ದು ಭಿಕ್ಷೆ' ಎಂದು ಹೇಳಿಕೆ ನೀಡಿದ್ದರು. ಈ ಕುರಿತು ಗುರುವಾರ ತಡರಾತ್ರಿ ಟ್ವೀಟ್‌ ಮಾಡಿದ್ದ ಕಾಂಗ್ರೆಸ್‌, ‘ಭಿಕ್ಷೆ ಬೇಡಿದವರಿಗೆ ಕ್ಷಮಾದಾನ ಸಿಕ್ಕಿದೆ. ಧೈರ್ಯದಿಂದ ಹೋರಾಡಿದ ವೀರರಿಗೆ ಸ್ವಾತಂತ್ರ್ಯ ದೊರೆತಿದೆ‘ ಎಂದು ತಿರುಗೇಟು ನೀಡಿತ್ತು.

ಕಂಗನಾ ವಿರುದ್ಧ ಕಿಡಿಕಾರಿದ್ದ ಬಿಜೆಪಿ ಸಂಸದ ವರುಣ್‌ ಗಾಂಧಿ, ‘ಇದು ದೇಶ ವಿರೋಧಿ ಕೃತ್ಯ ಮತ್ತು ಕಂಗನಾ ಅವರನ್ನು ದೇಶವಿರೋಧಿ’ ಎನ್ನಬಹುದು ಎಂದು ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.