
ಶ್ರೀನಗರ: ನವದೆಹಲಿಯ ಕೆಂಪು ಕೋಟೆ ಬಳಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಲಾಯಿಸುತ್ತಿದ್ದ ವ್ಯಕ್ತಿಯ ತಾಯಿಯನ್ನು ಡಿಎನ್ಎ ಪರೀಕ್ಷೆಗಾಗಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಿಂದ ಪೊಲೀಸರು ಕರೆದೊಯ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಸ್ಫೋಟದ ಸ್ಥಳದಲ್ಲಿ ಪತ್ತೆಯಾದ ಶಂಕಿತನ ದೇಹದ ಭಾಗಗಳನ್ನು ಸಂಗ್ರಹಿಸಿದ್ದು, ಶಂಕಿತನ ಡಿಎನ್ಎಗೆ ಆತನ ತಾಯಿ ಎನ್ನಲಾದ ಮಹಿಳೆಯ ಡಿಎನ್ಎ ಹೊಂದಾಣಿಕೆ ಆಗುತ್ತದೆಯೇ ಎಂಬುದನ್ನು ಪರೀಕ್ಷಿಸಲು ಆಕೆಯನ್ನು ಕರೆದೊಯ್ದಿದ್ದೇವೆ’ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೆಂಪು ಕೋಟೆಯ ಮೆಟ್ರೊ ನಿಲ್ದಾಣದ ಪಾರ್ಕಿಂಗ್ ಪ್ರದೇಶದ ಬಳಿ ಸೊಮವಾರ ಸಂಭವಿಸಿದ ಸ್ಫೋಟದಲ್ಲಿ ಬಳಸಲಾದ ಹುಂಡೈ ಐ20 ಕಾರನ್ನು ಡಾ. ಉಮರ್ ನಬಿ ಎಂಬಾತ ಚಾಲನೆ ಮಾಡುತ್ತಿದ್ದನು ಎಂದು ಹೇಳಲಾಗಿದ್ದು, ಈ ವಿಧ್ವಂಸಕ ಕೃತ್ಯದಲ್ಲಿ ಕನಿಷ್ಠ 12 ಜನರು ಮೃತಪಟ್ಟಿದ್ದಾರೆ. ಆತ ಪುಲ್ವಾಮಾದ ಕೊಯಿಲ್ ಗ್ರಾಮದವನು ಎಂದೂ ಅವರು ತಿಳಿಸಿದ್ದಾರೆ.
ಶಂಕಿತನ ಇಬ್ಬರು ಸಹೋದರರೂ ತಾಯಿಯೊಂದಿಗೆ ಆಸ್ಪತ್ರೆಗೆ ತೆರಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಫೋಟ ಗೊಂಡ ಕಾರಿನ ಮಾರಾಟ ಮತ್ತು ಖರೀದಿಗೆ ಸಂಬಂಧಿಸಿದಂತೆ ಮೂವರು ವ್ಯಕ್ತಿಗಳನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.