ನವದೆಹಲಿ: ಅಬಕಾರಿ ನೀತಿ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ತನ್ನ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ವಿನಂತಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಗುರುವಾರ ದೆಹಲಿ ಹೈಕೋರ್ಟ್ ನಲ್ಲಿ ಹೊಸ ಅರ್ಜಿ ಸಲ್ಲಿಸಿದ್ದಾರೆ.
ಈ ಬಗ್ಗೆ ಎಎನ್ಐ ಸುದ್ದಿ ಸಂಸ್ಥೆ ಎಕ್ಸ್ನಲ್ಲಿ ಮಾಹಿತಿ ನೀಡಿದೆ.
ಸುರೇಶ್ ಕುಮಾರ್ ಕೈಟ್ ಅವರಿರುವ ವಿಭಾಗೀಯ ಪೀಠ ಇಂದು ಬೆಳಿಗ್ಗೆ ಈ ಅರ್ಜಿಯ ವಿಚಾರಣೆ ನಡೆಸಲಿದೆ.
ಇದುವರೆಗೂ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯವು ಅರವಿಂದ ಕೇಜ್ರಿವಾಲ್ ಅವರಿಗೆ 9 ಬಾರಿ ನೋಟಿಸ್ ಜಾರಿ ಮಾಡಿದೆ.
ತಮಗೆ ಜಾರಿ ನಿರ್ದೇಶನಾಲಯ ನೀಡಿದ ಸರಣಿ ನೋಟಿಸ್ ಪ್ರಶ್ನಿಸಿ ಕೇಜ್ರಿವಾಲ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಬಗ್ಗೆ ವಿವರಣೆ ಬಯಸಿ ಕೋರ್ಟ್ ಇ.ಡಿಗೆ ನೋಟಿಸ್ ಜಾರಿ ಮಾಡಿದೆ.
ಕೇಜ್ರಿವಾಲ್ ಅವರನ್ನು ಇ.ಡಿ ಬಂಧಿಸುವ ಆತಂಕ ಇದ್ದು, ಒಂದು ವೇಳೆ ರಕ್ಷಣೆ ನೀಡಿದರೆ ವಿಚಾರಣೆಗೆ ಹಾಜರಾಗಲು ಸಿದ್ದವಿದ್ದಾರೆ ಎಂದು ಅವರ ಪರ ವಕೀಲರು ಬುಧವಾರ ನ್ಯಾಯಾಲಯದಲ್ಲಿ ನುಡಿದಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.