ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮತ್ತು ದಾಳಿ ನಡೆಸಿದ ಆರೋಪಿ ಸಕ್ರಿಯಾ ರಾಜೇಶ್
–ಪಿಟಿಐ ಚಿತ್ರಗಳು
ನವದೆಹಲಿ: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ‘ಜನ ಸಂವಾದ’ ಕಾರ್ಯಕ್ರಮದಲ್ಲಿ ಹಲ್ಲೆ ನಡೆಸಿದ ಆರೋಪಿಯನ್ನು 5 ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ನ್ಯಾಯಾಲಯದ ಮೂಲಗಳು ತಿಳಿಸಿವೆ.
ಕೊಲೆ ಯತ್ನ ಆರೋಪಕ್ಕೆ ಸಂಬಂಧಿಸಿದಂತೆ ಗುಜರಾತ್ನ ರಾಜ್ಕೋಟ್ ನಿವಾಸಿ ಸಕರಿಯಾ ರಾಜೇಶ್ಭಾಯಿ ಖಿಮ್ಜಿಭಾಯಿ (41) ಎಂಬುವವನನ್ನು ಬಂಧಿಸಿ, ದ್ವಾರಕಾದಲ್ಲಿರುವ ಮ್ಯಾಜಿಸ್ಟ್ರೇಟ್ ಎದುರು ತಡರಾತ್ರಿ ಹಾಜರುಪಡಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ರಾಜೇಶ್ಭಾಯಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಸೆಕ್ಷನ್ 109(1) ಅಡಿಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ. ಜತೆಗೆ, ಸರ್ಕಾರ ನೌಕರನ ಮೇಲೆ ಹಲ್ಲೆ ಮತ್ತು ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆಯೂ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ರೇಖಾ ಅವರನ್ನು ವೈದ್ಯರು ಪರೀಕ್ಷಿಸಿದ್ದಾರೆ. ಸದ್ಯ ಅವರು ವೈದ್ಯರ ನಿಗಾದಲ್ಲಿದ್ದಾರೆ ಎಂದು ಸಿಎಂಒ ಅಧಿಕಾರಿಗಳು ತಿಳಿಸಿದ್ದಾರೆ.
ಸಿವಿಲ್ ಲೈನ್ಸ್ನಲ್ಲಿರುವ ಮುಖ್ಯಮಂತ್ರಿ ಕಚೇರಿಯಲ್ಲಿ ಬುಧವಾರ ‘ಜನ ಸಂವಾದ’ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಜನರೊಂದಿಗೆ ಕುಳಿತು ತನ್ನ ಸರದಿ ಬಂದಾಗ ಮುಖ್ಯಮಂತ್ರಿ ಅವರ ಬಳಿ ಹೋದ ಆರೋಪಿಯು, ಅವರೊಂದಿಗೆ ಮಾತನಾಡುತ್ತಲೇ ಏಕಾಏಕಿ ಹಲ್ಲೆ ನಡೆಸಿದ ಎಂದು ಪ್ರತ್ಯಕ್ಷದರ್ಶಿಗಳು ವಿವರಿಸಿದ್ದಾರೆ.
ರೇಖಾ ಗುಪ್ತಾ ಅವರ ಕೈ, ಭುಜ ಮತ್ತು ತಲೆಗೆ ಪೆಟ್ಟಾಗಿದೆ ಎಂದು ಲೋಕೋಪಯೋಗಿ ಸಚಿವ ಪರ್ವೇಶ್ ವರ್ಮಾ ತಿಳಿಸಿದ್ದಾರೆ.
ಘಟನೆ ಬೆನ್ನಲ್ಲೇ ಕೇಂದ್ರ ಸರ್ಕಾರವು ರೇಖಾ ಗುಪ್ತಾ ಅವರಿಗೆ 'ಝಡ್' ಶ್ರೇಣಿಯ ವಿಐಪಿ ಭದ್ರತೆಯನ್ನು ಒದಗಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.