ನವದೆಹಲಿ (ಪಿಟಿಐ): ಅಬಕಾರಿ ನೀತಿ ಹಗರಣದ ಜೊತೆಗೆ ನಂಟು ಹೊಂದಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಾರಿಗೊಳಿಸಿರುವ ಸಮನ್ಸ್ಗಳಿಗೆ ಪ್ರತಿಕ್ರಿಯಿಸುತ್ತಿಲ್ಲ ಎಂದು ಆರೋಪಿಸಿ, ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳು ಇಲ್ಲಿನ ನ್ಯಾಯಾಲಯಕ್ಕೆ ನೀಡಿರುವ ದೂರಿನ ವಿಚಾರಣೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶನಿವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರಾದರು.
ಬಜೆಟ್ ಅಧಿವೇಶನ ನಡೆಯುತ್ತಿರುವ ಕಾರಣ ನ್ಯಾಯಾಲಯಕ್ಕೆ ಖುದ್ದು ಹಾಜರಾಗಲು ಸಾಧ್ಯವಾಗಿಲ್ಲ. ಶನಿವಾರದ ಮಟ್ಟಿಗೆ ವಿನಾಯಿತಿ ನೀಡಬೇಕೆಂದು ಕೇಜ್ರಿವಾಲ್ ಅವರು ನ್ಯಾಯಾಲಯಕ್ಕೆ ಮನವಿ ಮಾಡಿದರು. ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ದಿವ್ಯಾ ಮಲ್ಹೋತ್ರಾ ಅವರು ಇದಕ್ಕೆ ಸಮ್ಮತಿ ಸೂಚಿಸಿದರು.
ಮುಂದಿನ ವಿಚಾರಣೆಗೆ ಕೇಜ್ರಿವಾಲ್ ಅವರು ಖುದ್ದು ಹಾಜರಾಗಲಿದ್ದಾರೆ ಎಂದು ಅವರ ಪರ ವಕೀಲ ರಮೇಶ್ ಗುಪ್ತಾ ಅವರು ನ್ಯಾಯಾಲಯಕ್ಕೆ ತಿಳಿಸಿದರು.
ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯವು ಮಾರ್ಚ್ 16ಕ್ಕೆ ಮುಂದೂಡಿದೆ.
‘ಕೇಜ್ರಿವಾಲ್ ಅವರು ಸಮನ್ಸ್ಗಳಿಗೆ ಪ್ರತಿಕ್ರಿಯಿಸುತ್ತಿಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಕಾನೂನನ್ನು ಉಲ್ಲಂಘಿಸಿದರೆ ಅದರಿಂದ ಸಾಮಾನ್ಯ ಜನರಿಗೆ ಕೆಟ್ಟ ಸಂದೇಶ ರವಾನೆಯಾಗುತ್ತದೆ’ ಎಂದು ಇ.ಡಿ ದೂರಿನಲ್ಲಿ ಹೇಳಿದೆ.
ಕಾನೂನು ಬಾಹಿರವಾಗಿ ಮತ್ತು ರಾಜಕೀಯ ಪ್ರೇರಿತವಾಗಿ ಸಮನ್ಸ್ ನೀಡಲಾಗಿದೆ ಎಂದು ಕೇಜ್ರಿವಾಲ್ ಅವರು ಈ ಹಿಂದೆ ಇ.ಡಿ.ಗೆ ಪತ್ರ ಬರೆದಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.