ನವದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ದೆಹಲಿ- ಉತ್ತರ ಪ್ರದೇಶದ ಗಡಿಯಲ್ಲಿರುವ ಗಾಜಿಪುರದ ಬಳಿ ರೈತರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಭೇಟಿ ನೀಡಿದ್ದಾರೆ.
'ಪ್ರತಿಭಟನಾಕಾರರಿಗೆ ನಿನ್ನೆ(ಗುರುವಾರ) ರಾತ್ರಿ ನೀರು ಮತ್ತು ಶೌಚಾಲಯದ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಪರಿಶೀಲಿಸಲು ಗಾಜಿಪುರಕ್ಕೆ ಬಂದಿದ್ದೇನೆ' ಎಂದು ಮನೀಷ್ ಸಿಸೋಡಿಯಾ ಅವರು ಸುದ್ದಿಸಂಸ್ಥೆ ಎಎನ್ಐಗೆ ತಿಳಿಸಿದ್ದಾರೆ.
ರೈತರ ಹೋರಾಟ ಮುಂದುವರಿದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿಯಿಂದ ಗಾಜಿಪುರ ಗಡಿಯಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಿಎಪಿಎಫ್ನ ಮೂರು ತುಕಡಿಗಳು (ಕೇಂದ್ರ ಸಶಸ್ತ್ರ ಪೊಲೀಸ್ ಪಡೆ), ಪ್ರಾಂತೀಯ ಸಶಸ್ತ್ರ ಕಾನ್ಸ್ಟಾಬ್ಯುಲರಿಯ ಆರು ತುಕಡಿಗಳು ಮತ್ತು 1000 ಪೊಲೀಸ್ ಸಿಬ್ಬಂದಿಯನ್ನು ಗಡಿಯಲ್ಲಿ ನಿಯೋಜಿಸಲಾಗಿದೆ.
ರಸ್ತೆಗಳಲ್ಲಿ ಠಿಕಾಣಿ ಹೂಡುತ್ತಿರುವ ನೂರಾರು ರೈತರಿಗೆ ವಿದ್ಯುತ್ ಮತ್ತು ನೀರು ಸರಬರಾಜನ್ನು ಜಿಲ್ಲಾಡಳಿತ ಕಡಿತಗೊಳಿಸಿತ್ತು. ನವೆಂಬರ್ 26 ರಂದು ರೈತರು ತಮ್ಮ 'ದೆಹಲಿ ಚಲೋ' ಪ್ರತಿಭಟನೆಯನ್ನು ಪ್ರಾರಂಭಿಸಿದಾಗಿನಿಂದ ಗಾಜಿಪುರ ಗಡಿಯನ್ನು ಮುಚ್ಚಲಾಗಿತ್ತು. ಆದರೆ, ಮಂಗಳವಾರ, ರೈತರು ಬ್ಯಾರಿಕೇಡ್ಗಳನ್ನು ಮುರಿದು ತಮ್ಮ ಟ್ರಾಕ್ಟರ್ ರ್ಯಾಲಿಯನ್ನು ನಡೆಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.