ADVERTISEMENT

ಮುಖ್ಯಮಂತ್ರಿಯಾಗಲು ಬಿಜೆಪಿಯಲ್ಲಿ ಅರ್ಹರಿಲ್ಲ: ಅರವಿಂದ ಕೇಜ್ರಿವಾಲ್

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2020, 12:30 IST
Last Updated 6 ಫೆಬ್ರುವರಿ 2020, 12:30 IST
ಅರವಿಂದ ಕೇಜ್ರಿವಾಲ್‌
ಅರವಿಂದ ಕೇಜ್ರಿವಾಲ್‌   

ನವದೆಹಲಿ: ‘ದೆಹಲಿ ಮುಖ್ಯಮಂತ್ರಿಯಾಗಲು ಬಿಜೆಪಿಯಲ್ಲಿ ಅರ್ಹರಾದವರು ಯಾರೂ ಇಲ್ಲ’ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಹೇಳಿದ್ದಾರೆ.

ಬಹಿರಂಗ ಪ್ರಚಾರಕ್ಕೆ ಅಂತಿಮ ದಿನವಾದಗುರುವಾರ ಮಾತನಾಡಿದ ಅವರು, ‘ಮತ್ತೆ ಆಡಳಿತಕ್ಕೆ ಬಂದರೆ ಉಚಿತ ಯೋಜನೆಗಳನ್ನು ಮುಂದುವರಿಸಲಾಗುವುದು ಮತ್ತು ಅಗತ್ಯ ಬಿದ್ದರೆ ಇಂತಹ ಇನ್ನಷ್ಟು ಯೋಜನೆಗಳನ್ನು ಪರಿಚಯಿಸುತ್ತೇವೆ’ ಎಂದೂಭರವಸೆ ನೀಡಿದ್ದಾರೆ.

ಬಿಜೆಪಿಯಲ್ಲಿ ಒಳ್ಳೆಯ ಅಭ್ಯರ್ಥಿಗಳ ಕೊರತೆ ಇದೆ. ಒಂದು ವೇಳೆ ಸಂಬಿತ್‌ ಪಾತ್ರ ಅಥವಾ ಅನುರಾಗ್‌ ಠಾಕೂರ್‌ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಿದರೆ ಏನಾಗಬಹದು? ಎಂದೂ ಪ್ರಶ್ನಿಸಿದ್ದಾರೆ.

ADVERTISEMENT

ಚುನಾವಣೆಗಿಂತ ಮೊದಲು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸುವಂತೆ ಅವರು ಬಿಜೆಪಿಗೆ ಸವಾಲು ಹಾಕಿದ್ದಾರೆ.

ಪ್ರತಿಕ್ರಿಯೆ ಕೇಳಿದ ಹೈಕೋರ್ಟ್‌

ದೆಹಲಿ ಚುನಾವಣೆಗೆಕರೋಲ್‌ ಬಾಗ್‌ ಕ್ಷೇತ್ರದಿಂದ ಸ್ಪರ್ಧಿಸಿರುವ ಎಎಪಿ ಅಭ್ಯರ್ಥಿ ವಿಶೇಷ್‌ ರವಿ ಅವರು ಅಫಿಡವಿಟ್‌ನಲ್ಲಿ ಶೈಕ್ಷಣಿಕ ಅರ್ಹತೆಯನ್ನು ಮರೆಮಾಚಿದ್ದು, ಅವರ ಉಮೇದುವಾರಿಕೆಯನ್ನು ತಿರಸ್ಕರಿಸಬೇಕೆಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ಕುರಿತು ಪ್ರತಿಕ್ರಿಯೆ ನೀಡುವಂತೆ ದೆಹಲಿ ಹೈಕೋರ್ಟ್ ಚುನಾವಣಾ ಆಯೋಗಕ್ಕೆ ಗುರುವಾರ ಸೂಚಿಸಿದೆ.

ಯೋಗಿಂದರ್‌ ಚಾಂಡೋಲಿಯಾ ಎಂಬುವವರು ಸಲ್ಲಿಸಿರುವ ಅರ್ಜಿಯ ಕುರಿತು, ನಿಲುವು ವ್ಯಕ್ತಪಡಿಸುವಂತೆ ಚುನಾವಣಾ ಆಯೋಗಕ್ಕೆ ಮತ್ತು ಅಭ್ಯರ್ಥಿಗೆ ಮುಖ್ಯ ನ್ಯಾಯಮೂರ್ತಿ ಡಿ.ಎನ್‌. ಪಟೇಲ್‌ ಮತ್ತು ನ್ಯಾಯಮೂರ್ತಿ ಸಿ. ಹರಿಶಂಕರ್‌ ಅವರನ್ನೊಳಗೊಂಡ ನ್ಯಾಯಪೀಠವು ನೋಟಿಸ್‌ ನೀಡಿದೆ.

ಈ ಕುರಿತು ನ್ಯಾಯಪೀಠವು ಶುಕ್ರವಾರ ವಿಚಾರಣೆ ನಡೆಸಲಿದೆ. ಬಿಜೆಪಿಯು ಕರೋಲ್‌ ಬಾಗ್‌ ಕ್ಷೇತ್ರದಲ್ಲಿ ಗೆಲ್ಲುವ ಭರವಸೆ ಹೊಂದಿದೆ.

ಅರ್ಜಿ ವಿಚಾರಣೆಗೆ ನಿರಾಕರಣೆ

ನಾಮಪತ್ರ ತಿರಸ್ಕೃತಗೊಂಡಿರುವುದನ್ನು ಪ್ರಶ್ನಿಸಿ 11 ಮಂದಿ ಸ್ವತಂತ್ರ ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ದೆಹಲಿ ಹೈಕೋರ್ಟ್‌ ನಿರಾಕರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.