ನವದೆಹಲಿ: ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ, ಪ್ರಸ್ತುತ ಜೈಲಿನಲ್ಲಿರುವ ಸಂಸದ ರಶೀದ್ ಎಂಜಿನಿಯರ್ ಅವರು, ಸಂಸತ್ ಅಧಿವೇಶನದಲ್ಲಿ ಪಾಲ್ಗೊಳ್ಳಲು ಕಸ್ಟಡಿ ಪೆರೋಲ್ ಕೋರಿ ಸಲ್ಲಿಸಿದ್ದ ಅರ್ಜಿ ಕುರಿತ ತೀರ್ಪನ್ನು ದೆಹಲಿ ಹೈಕೋರ್ಟ್ ಶುಕ್ರವಾರ ಕಾಯ್ದಿರಿಸಿದೆ.
ಬಾರಾಮುಲ್ಲಾ ಕ್ಷೇತ್ರದ ಸಂಸದ ರಶೀದ್ ಪರ ವಕೀಲರು ಹಾಗೂ ಎನ್ಐಎ ಪರ ವಕೀಲರ ವಾದ–ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ವಿಕಾಸ್ ಮಹಾಜನ್ ಅವರು, ‘ನ್ಯಾಯಾಲಯವು ತೀರ್ಪನ್ನು ಕಾಯ್ದಿರಿಸಿದೆ’ ಎಂದು ಹೇಳಿದರು.
ಎನ್ಐಎ ವರ ವಕೀಲರು ಕಸ್ಟಡಿ ಪೆರೋಲ್ ನೀಡಲು ಆಕ್ಷೇಪ ವ್ಯಕ್ತಪಡಿಸಿದರು.
‘ರಶೀದ್ ಅವರು ಅತಿ ದೊಡ್ಡ ಲೋಕಸಭಾ ಕ್ಷೇತ್ರದ ಜನಪ್ರತಿನಿಧಿಯಾಗಿದ್ದಾರೆ. ಅಧಿವೇಶನ ಪ್ರಕ್ರಿಯೆಯಿಂದ ಕ್ಷೇತ್ರದ ಪ್ರಾತಿನಿಧ್ಯವನ್ನು ತಡೆಯಬೇಡಿ… ಕ್ಷೇತ್ರದ ಧ್ವನಿಯನ್ನು ಹತ್ತಿಕ್ಕಬೇಡಿ’ ಎಂದು ರಶೀದ್ ಅವರ ಪರ ವಕೀಲರು ವಾದಿಸಿದರು.
ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆಯಡಿ ಬಂಧನಕ್ಕೊಳಗಾಗಿರುವ ರಶೀದ್ ಅವರು, 2019ರಿಂದ ತಿಹಾರ್ ಜೈಲಿನಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.