ನವದೆಹಲಿ(ಪಿಟಿಐ): ಐಎನ್ಎಕ್ಸ್ ಮೀಡಿಯಾ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಆರೋಗ್ಯದ ಬಗ್ಗೆ ಅಭಿಪ್ರಾಯ ನೀಡಲು, ತಕ್ಷಣದಲ್ಲೇ ಸಮಿತಿ ರಚಿಸಲು ಏಮ್ಸ್ ನಿರ್ದೇಶಕರಿಗೆ ದೆಹಲಿ ಹೈಕೋರ್ಟ್ ಗುರುವಾರ ನಿರ್ದೇಶಿಸಿದೆ.
ಹೊಟ್ಟೆನೋವಿನಿಂದ ಬಳಲುತ್ತಿದ್ದ ಚಿದಂಬರಂ ಅವರನ್ನು ಸೋಮವಾರ ಏಮ್ಸ್ಗೆ ದಾಖಲಿಸಲಾಗಿತ್ತು. ಅನಾರೋಗ್ಯದ ಕಾರಣ ಜಾರಿ ನಿರ್ದೇಶನಾಲಯ ದಾಖಲಿಸಿರುವ ಪ್ರಕರಣದಲ್ಲಿ 6 ದಿನದಮಧ್ಯಂತರ ಜಾಮೀನು ನೀಡಬೇಕು ಎಂದು ಚಿದಂಬರಂ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ‘ಅಕ್ಟೋಬರ್ 5ರಿಂದ ನನಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿದೆ. ನನಗೆ ತಕ್ಷಣ ಚಿಕಿತ್ಸೆ ಅಗತ್ಯವಾಗಿದ್ದು, ಹೈದರಾಬಾದ್ನಲ್ಲಿರುವ ವೈದ್ಯರಾದ ನಾಗೇಶ್ವರ್ ರೆಡ್ಡಿ ಅವರಿಂದ ಚಿಕಿತ್ಸೆ ಪಡೆಯಬೇಕಾಗಿದೆ’ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುರೇಶ್ ಕೈಟ್, ‘ಗುರುವಾರವೇ ಸಮಿತಿ ರಚಿಸಿ, ಚಿದಂಬರಂ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಚರ್ಚಿಸಿ ವರದಿ ಸಲ್ಲಿಸಬೇಕು. ಶುಕ್ರವಾರ ಈ ಕುರಿತು ವಿಚಾರಣೆ ನಡೆಸಲಾಗುವುದು’ ಎಂದರು.‘ಚಿದಂಬರಂ ಅವರಿಗೆ ಚಿಕಿತ್ಸೆ ನೀಡುತ್ತಿರುವ ನಾಗೇಶ್ವರ್ ರೆಡ್ಡಿ ಅವರನ್ನೂ ಸಮಿತಿಯಲ್ಲಿ ಸೇರಿಸುವಂತೆ’ ಏಮ್ಸ್ ನಿರ್ದೇಶಕರಿಗೆ ಸೂಚಿಸಿದರು.
ಸ್ಥಳಾಂತರಕ್ಕೆ ಮನವಿ: ‘ಚಿದಂಬರಂ ಅವರ ಆರೋಗ್ಯ ಕ್ಷೀಣಿಸಿದ್ದು, ಚಿಕಿತ್ಸೆಗಾಗಿ ಹೈದರಾಬಾದ್ಗೆ ಕರೆದುಕೊಂಡು ಹೋಗಬೇಕಿದೆ’ ಎಂದುಚಿದಂಬರಂ ಅವರ ಪರ ವಾದಿಸುತ್ತಿರುವ ಹಿರಿಯ ವಕೀಲರಾದ ಕಪಿಲ್ ಸಿಬಿಲ್ ಹೇಳಿದರು.‘ಚಿದಂಬರಂ ಅವರ ತೂಕ 73 ಕೆ.ಜಿ.ಯಿಂದ 66 ಕೆ.ಜಿ.ಗೆ ಇಳಿಕೆಯಾಗಿದ್ದು, ಜೈಲಿನಲ್ಲಿ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸುತ್ತಿರುವುದಕ್ಕೆ ಸಾಕ್ಷಿಯಾಗಿದೆ’ ಎಂದು ವಕೀಲರಾದ ಎ.ಎಂ.ಸಿಂಘ್ವಿ ವಾದಿಸಿದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.