ADVERTISEMENT

ಕೇಜ್ರಿವಾಲ್ ನಿವಾಸದಲ್ಲಿ ಧ್ವಂಸ: ತನಿಖೆಗೆ ಹಾಜರಾಗಲು ತೇಜಸ್ವಿ ಸೂರ್ಯಗೆ ಸೂಚನೆ

ಪಿಟಿಐ
Published 26 ಏಪ್ರಿಲ್ 2022, 11:22 IST
Last Updated 26 ಏಪ್ರಿಲ್ 2022, 11:22 IST
ಸಂಸದ ತೇಜಸ್ವಿ ಸೂರ್ಯ
ಸಂಸದ ತೇಜಸ್ವಿ ಸೂರ್ಯ   

ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ನಡೆದ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಹಾಜರಾಗುವಂತೆ ದೆಹಲಿ ಪೊಲೀಸರು ಲೋಕಸಭಾ ಸಂಸದ ತೇಜಸ್ವಿ ಸೂರ್ಯ ಅವರನ್ನು ಕೇಳಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಲಿಖಿತ ಸಂವಹನದ ಮೂಲಕ ತನಿಖೆಗೆ ಹಾಜರಾಗುವಂತೆ ಸೂರ್ಯ ಅವರನ್ನು ಕೇಳಲಾಗಿದೆ. ಅವರು ತಮ್ಮ ಸಹಕಾರದ ಭರವಸೆ ನೀಡಿದ್ದು, ತನಿಖೆಗೆ ಹಾಜರಾಗುವುದಾಗಿ ಹೇಳಿರುವುದಾಗಿ ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಎಂಟು ಜನರನ್ನು ದೆಹಲಿಯಿಂದ ಬಂಧಿಸಲಾಗಿದೆ. ಇವರನ್ನೊಳಗೊಂಡಂತೆ ಒಟ್ಟು 26 ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ತಾಂತ್ರಿಕ ಮೂಲಗಳ ಮೂಲಕ ಅವರನ್ನು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

ADVERTISEMENT

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.

‘ಚುನಾವಣೆಗಳಲ್ಲಿ ಎಎಪಿಯನ್ನು ಸೋಲಿಸಲು ಬಿಜೆಪಿಗೆ ಸಾಧ್ಯವಿಲ್ಲ. ಹೀಗಾಗಿ ಬಿಜೆಪಿಯ ಕಾರ್ಯಕರ್ತರು ಅರವಿಂದ ಕೇಜ್ರಿವಾಲ್ ಅವರನ್ನು ಕೊಲ್ಲಲು ಯತ್ನಿಸಿದ್ದಾರೆ’ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಆರೋಪಿಸಿದ್ದರು.

‘ದಿ ಕಾಶ್ಮೀರ್ ಫೈಲ್ಸ್‌’ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವುದಕ್ಕಿಂತ, ಅದನ್ನು ಯುಟ್ಯೂಬ್‌ಗೆ ಹಾಕಿಬಿಟ್ಟರೆ ಎಲ್ಲಾ ಜನ ಉಚಿತವಾಗಿ ನೋಡುತ್ತಾರೆ’ ಎಂದು ಕೇಜ್ರಿವಾಲ್ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಕ್ಷಮೆಯಾಚಿಸುವಂತೆ ಒತ್ತಾಯಿಸಿ ಬಿಜೆಪಿ ಸಂಸದ ಮತ್ತು ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಮಾರ್ಚ್ 30 ರಂದು ಬಿಜೆಪಿ ಕಾರ್ಯಕರ್ತರು, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಮನೆಮುಂದೆ ಬುಧವಾರ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಬಿಜೆಪಿಯ ಹಲವು ಕಾರ್ಯಕರ್ತರು ಪೊಲೀಸ್ ಭದ್ರತೆಯನ್ನು ಬೇಧಿಸಿ, ದಾಂದಲೆ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.