ನವದೆಹಲಿ: ದೆಹಲಿಯಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧದ ಪ್ರತಿಭಟನೆಗೆ ಪ್ರಚೋದನೆ ನೀಡಿದ ಆರೋಪದಡಿ ಇಸ್ಲಾಮಿಕ್ ಸ್ಟೇಟ್(ಐಎಸ್) ಸಂಪರ್ಕವಿದ್ದ ಕಾಶ್ಮೀರ ಮೂಲದದಂಪತಿಯನ್ನುದಕ್ಷಿಣ ದೆಹಲಿಯ ಜಾಮಿಯಾ ನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ.
ದಂಪತಿ,ದೆಹಲಿಯಲ್ಲಿ ಆತ್ಮಾಹುತಿ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದರು ಹಾಗೂ ಭಯೋತ್ಪಾದನಾ ದಾಳಿ ನಡೆಸಲು ಮುಸ್ಲಿಂ ಯುವಕರಿಗೆ ಪ್ರೇರೇಪಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಸಿಎಎ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗಳ ಹಿಂದೆ ಐಎಸ್ ಕೈವಾಡವಿದೆ ಎಂದು ಮೂಲಗಳು ಮಾಹಿತಿ ನೀಡಿವೆ ಎಂದು ಎನ್ಡಿಟಿವಿ ವರದಿ ಮಾಡಿದೆ.
‘ಬಂಧಿತರನ್ನುಜಹಾನ್ಜೇಬ್ ಸಮಿ ಹಾಗೂ ಆತನ ಪತ್ನಿ ಹಿನಾ ಬಾಶಿರ್ ಬೇಗ್ ಎಂದು ಗುರುತಿಸಲಾಗಿದೆ. ಇವರಿಬ್ಬರೂ ಸಿಎಎ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಗೆ ಪ್ರಚೋದನೆ ನೀಡುತ್ತಿದ್ದರು’ ಎಂದು ಡಿಸಿಪಿ ಪ್ರಮೋದ್ ಸಿಂಗ್ ಕುಶ್ವಾ ತಿಳಿಸಿದರು.
‘ಅಫ್ಗಾನಿಸ್ತಾನದಲ್ಲಿರುವ ಐಸ್ ಉಗ್ರ ಸಂಘಟನೆಯ ಪ್ರಮುಖ ನಾಯಕರ ಜೊತೆ ದಂಪತಿ ಸಂಪರ್ಕದಲ್ಲಿದ್ದರು. ದೇಶದಾದ್ಯಂತ ಸಿಎಎ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯನ್ನು ದಾಳವಾಗಿ ಬಳಸಿಕೊಂಡು, ಭಯೋತ್ಪಾದನಾ ದಾಳಿ ನಡೆಸಲು ಮುಸ್ಲಿಂ ಯುವಕರಿಗೆ ಪ್ರಚೋದಿಸುತ್ತಿದ್ದರು’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.
ಸಮಿ ಖಾಸಗಿ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ದಂಪತಿ ಸಾಮಾಜಿಕ ಜಾಲತಾಣದಲ್ಲಿ ‘ಇಂಡಿಯನ್ ಮುಸ್ಲಿಂ ಯುನೈಟ್’ ಹೆಸರಿನ ಖಾತೆ ಹೊಂದಿದ್ದರು. ಇದರ ಮೂಲಕ ಸಿಎಎ ವಿರುದ್ಧದದ ಪ್ರತಿಭಟನೆಗೆ ಜನರನ್ನು ಒಗ್ಗೂಡಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.