ನವದೆಹಲಿ: ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಲೋಕೋಪಯೋಗಿ ಇಲಾಖೆಯ (ಪಿಡಬ್ಲುಡಿ) ಅಧಿಕಾರಿಯೊಬ್ಬರ ವಿರುದ್ಧ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜನವರಿ 7ರಂದು ರಾಜಕೀಯ ಉದ್ದೇಶಕ್ಕಾಗಿ ಸರ್ಕಾರಿ ವಾಹನವನ್ನು ಬಳಸಿಕೊಂಡ ಆರೋಪದ ಮೇಲೆ ಪ್ರಾರಂಭದಲ್ಲಿ ಮುಖ್ಯಮಂತ್ರಿ ಅತಿಶಿ ಅವರ ವಿರುದ್ಧ ಚುನಾವಣಾ ಅಧಿಕಾರಿಯಿಂದ ದೂರು ದಾಖಲಾಗಿತ್ತು.
ವಿವರವಾದ ತನಿಖೆ ನಡೆಸಿದ ಬಳಿಕ, ಚುನಾವಣಾ ಪ್ರಚಾರಕ್ಕೆ ಸರ್ಕಾರಿ ವಾಹನವನ್ನು ಬಳಸಿದ್ದಕ್ಕಾಗಿ ಲೋಕೋಪಯೋಗಿ ಇಲಾಖೆ (ಪಿಡಬ್ಲುಡಿ) ಅಧಿಕಾರಿಯ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ದೆಹಲಿಯ ಗೋವಿಂದ್ ಪುರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಹಾಗೂ ರಾಜಕೀಯ ಉದ್ದೇಶಕ್ಕೆ ಸರ್ಕಾರಿ ವಾಹನ ಬಳಕೆ ಮಾಡಿರುವ ಕುರಿತು ಜನವರಿ 8ರಂದು ಸಹಾಯಕ ಪೊಲೀಸ್ ಆಯುಕ್ತ ಕಲ್ಕಾಜಿ ಅವರಿಗೆ ದೂರು ಪತ್ರ ಬಂದಿದೆ ಎಂದು ಎಫ್ಐಆರ್ನಲ್ಲಿ ತಿಳಿಸಲಾಗಿದೆ.
ಚುನಾವಣಾ ಸಮಯದಲ್ಲಿ ಪ್ರಚಾರ ಅಥವಾ ಚುನಾವಣಾ ಸಂಬಂಧಿತ ಪ್ರಯಾಣಕ್ಕಾಗಿ ಅಧಿಕೃತ ವಾಹನಗಳ ಬಳಕೆಯ ಮೇಲೆ ಸಂಪೂರ್ಣ ನಿಷೇಧವಿದೆ.
ಈ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.