ADVERTISEMENT

ದೆಹಲಿ ಮಾಲಿನ್ಯ: 1 ವಾರ ಶಾಲೆಗಳಿಗೆ ರಜೆ, ಸರ್ಕಾರಿ ನೌಕರರಿಗೆ ವರ್ಕ್ ಫ್ರಂ ಹೋಮ್

ಪಿಟಿಐ
Published 13 ನವೆಂಬರ್ 2021, 14:43 IST
Last Updated 13 ನವೆಂಬರ್ 2021, 14:43 IST
ಅರವಿಂದ್ ಕೇಜ್ರಿವಾಲ್: ಪಿಟಿಐ ಚಿತ್ರ
ಅರವಿಂದ್ ಕೇಜ್ರಿವಾಲ್: ಪಿಟಿಐ ಚಿತ್ರ   

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಪಾಯಕಾರಿ ಮಟ್ಟಕ್ಕೆ ತಲುಪಿರುವ ವಾಯುಮಾಲಿನ್ಯ ನಿಯಂತ್ರಣಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ತುರ್ತು ಕ್ರಮಗಳನ್ನು ಘೋಷಿಸಿದ್ದಾರೆ. ಶಾಲೆಗಳಿಗೆ ಒಂದು ವಾರ ರಜೆ, ಕಟ್ಟಡ ಕಾಮಗಾರಿಗಳಿಗೆ ನಿಷೇಧ ಮತ್ತು ಸರ್ಕಾರಿ ನೌಕರರಿಗೆ ವರ್ಕ್ ಫ್ರಂ ಹೋಮ್ ಆದೇಶ ಮಾಡಿದ್ದಾರೆ.

ಮಾಲಿನ್ಯದ ಪರಿಸ್ಥಿತಿ ಸುಧಾರಣೆಗೆ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ತಾಕೀತು ಮಾಡಿದ ಬೆನ್ನಲ್ಲೇ ತುರ್ತು ಸಭೆ ನಡೆಸಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಈ ಕ್ರಮಗ:ಳನ್ನು ಘೋಷಿಸಿದ್ದಾರೆ. ಲಾಕ್‌ಡೌನ್ ಬಗ್ಗೆಯೂ ಸುಪ್ರೀಂ ಕೋರ್ಟ್ ಮುಂದೆ ಪ್ರಸ್ತಾ‍ಪ ಇಡುವುದಾಗಿ ಅವರು ಸುದ್ದಿಗಾರರಿಗೆ ತಿಳಿಸಿದ್ಧಾರೆ.

ದೆಹಲಿಯಲ್ಲಿ ಮಾಲಿನ್ಯ ಹೆಚ್ಚಳವನ್ನು ತುರ್ತು ಪರಿಸ್ಥಿತಿ ಎಂದು ಹೇಳಿದ್ದ ಸುಪ್ರೀಂ ಕೋರ್ಟ್, ಪರಿಸ್ಥಿತಿ ನಿಯಂತ್ರಣಕ್ಕೆ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ದೆಹಲಿ ಮತ್ತು ಕೇಂದ್ರ ಸರ್ಕಾರಗಳಿಗೆ ಸೂಚಿಸಿತ್ತು.

ADVERTISEMENT

ವಾಯುಮಾಲಿನ್ಯ ಹೆಚ್ಚಾಗಿರುವುದರಿಂದ ಸೋಮವಾರದಿಂದ ಒಂದು ವಾರ ಶಾಲೆಗಳನ್ನು ಬಂದ್ ಮಾಡಲಾಗುತ್ತದೆ. ಕಟ್ಟಡ ಕಾಮಗಾರಿಗಳಿಗೆ ನಿಷೇಧ ವಿಧಿಸಲಾಗಿದೆ. ಸರ್ಕಾರಿ ನೌಕರರಿಗೆ ಮನೆಯಿಂದಲೇ ಕೆಲಸ ಮಾಡಲು ಸೂಚಿಸಲಾಗುವುದು ಮತ್ತು ಖಾಸಗಿ ಕಂಪನಿಗಳಿಗೆ ಪ್ರತ್ಯೇಕ ಸೂಚನೆಗಳನ್ನು ನೀಡಲಾಗುವುದು ಎಂದು ಕೇಜ್ರಿವಾಲ್ ಹೇಳಿದರು.

ನೆರೆ ರಾಜ್ಯಗಳಲ್ಲಿ ಕೃಷಿ ತ್ಯಾಜ್ಯ ಸುಡುವಿಕೆಯಿಂದ ಮಾಲಿನ್ಯ ಹೆಚ್ಚಳವಾಗಿದೆ. ಪರಿಸ್ಥಿತಿ ಸುಧಾರಣೆಗೆ ಸಂಬಂಧಪಟ್ಟ ಎಲ್ಲರೂ ಒಟ್ಟಿಗೆ ಕೆಲಸ ಮಾಡಬೇಕಿದೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.