ADVERTISEMENT

ದೆಹಲಿಯಲ್ಲಿ ಯುವತಿಯ ಭೀಕರ ಹತ್ಯೆ: ಆರೋಪಿ ಸಾಹೀಲ್ ಬಂಧನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಮೇ 2023, 10:34 IST
Last Updated 29 ಮೇ 2023, 10:34 IST
   

ನವದೆಹಲಿ: 16 ವರ್ಷದ ಯುವತಿಗೆ ಚಾಕುವಿನಿಂದ ಚುಚ್ಚಿ, ಕಲ್ಲಿನಿಂದ ಜಜ್ಜಿ ಕೊಂದ 20 ವರ್ಷದ ಯುವಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು 20 ವರ್ಷದ ಸಾಹೀಲ್ ಎಂದು ಗುರುತಿಸಲಾಗಿದೆ. ಈತ ಯುವತಿಗೆ 20ಕ್ಕೂ ಅಧಿಕ ಬಾರಿ ಚಾಕುವಿನಿಂದ ಚುಚ್ಚಿ, ಬಳಿಕ, ಕಲ್ಲಿನಿಂದ ಜಜ್ಜಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಉತ್ತರಪ್ರದೇಶದ ಬುಲಂದ್‌ಶಹರ್‌ನಿಂದ ಬಂಧಿಸಲಾಗಿದೆ. ಬಂಧಿತನು ದೆಹಲಿಯಲ್ಲಿ ಎಸಿ ಮತ್ತು ಫ್ರಿಡ್ಜ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಎಂದು ದೆಹಲಿ ಪೊಲೀಸ್ ಪಿಆರ್‌ಒ ಸುಮನ್ ನಲ್ವಾ ತಿಳಿಸಿದ್ದಾರೆ.

ADVERTISEMENT

ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವಿಡಿಯೊದಲ್ಲಿ, ಜನಸಂದಣಿಯಿಂದ ಕೂಡಿರುವ ರಸ್ತೆಯಲ್ಲೇ ಹತ್ಯೆ ನಡೆದಿದ್ದು, ದಾರಿಹೋಕರಲ್ಲಿ ಯಾರೊಬ್ಬರೂ ಸಾಹಿಲ್‌ನನ್ನು ತಡೆಯುವ ಯತ್ನ ನಡೆಸದಿರುವುದು ಕಂಡುಬಂದಿದೆ. ಬಳಿಕ, ಸಾಹೀಲ್ ಘಟನಾ ಸ್ಥಳದಿಂದ ಪರಾರಿಯಾಗಿದ್ದಾನೆ.

ಘಟನೆ ಕುರಿತಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಸಿಎಂ ಅರವಿಂದ ಕೇಜ್ರಿವಾಲ್, ದೆಹಲಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

‘ದೆಹಲಿಯಲ್ಲಿ ಯುವತಿಯ ಬರ್ಬರ ಹತ್ಯೆ ನಡೆದಿದೆ. ಇದು ಅತ್ಯಂತ ದುಃಖಕರ ಮತ್ತು ದುರದೃಷ್ಟಕರ ಘಟನೆ. ಕ್ರಿಮಿನಲ್‌ಗಳಿಗೆ ಪೊಲೀಸರ ಬಗ್ಗೆ ಭಯ ಇಲ್ಲ. ಗವರ್ನರ್ ಸರ್ ಕಾನೂನು ಮತ್ತು ಸುವ್ಯವಸ್ಥೆ ನಿಮ್ಮ ಜವಾಬ್ದಾರಿಯಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಿ’ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ದೆಹಲಿಯಲ್ಲಿ ಪೊಲೀಸ್ ಮತ್ತು ಕಾನೂನಿನ ಬಗ್ಗೆ ಯಾರೊಬ್ಬರಿಗೂ ಭಯ ಇಲ್ಲದಂತಾಗಿದೆ ಎಂದು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲೀವಾಲ್ ಕಿಡಿಕಾರಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.