ನವದೆಹಲಿ: ಈಶಾನ್ಯ ದೆಹಲಿಯಲ್ಲಿ ಶಾಂತಿ ಮರುಸ್ಥಾಪನೆಗಾಗಿ ದೆಹಲಿ ಸರ್ಕಾರ ಹಲವು ಕ್ರಮಗಳನ್ನು ಪ್ರಕಟಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಅಗತ್ಯ ಸೂಚನೆಗಳನ್ನು ನೀಡಿದರು.
ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೇಜ್ರಿವಾಲ್,‘ತಳಮಟ್ಟದಲ್ಲಿ ಕಾರ್ಯನಿರ್ವಹಿಸುವ ಪೊಲೀಸರಿಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಅಧಿಕಾರವಿಲ್ಲ. ಮೇಲಿನವರ ಆಜ್ಞೆಯನ್ನು ಮಾತ್ರ ಪಾಲಿಸುವಂತೆ ಅವರಿಗೆ ಸೂಚಿಸಲಾಗಿದೆ. ಹಿಂಸಾಚಾರ ನಿಯಂತ್ರಣಕ್ಕೆ ಇದು ದೊಡ್ಡ ತೊಡಕಾಗಿದೆ’ ಎಂದು ಅಭಿಪ್ರಾಯಪಟ್ಟರು.
‘ಇತರ ರಾಜ್ಯಗಳಿಂದ ದೆಹಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುತ್ತಿದ್ದಾರೆ. ಇದರಿಂದ ಹಿಂಸಾಚಾರ ಇನ್ನಷ್ಟುಹೆಚ್ಚಬಹುದು. ಹೀಗಾಗಿ ದೆಹಲಿಯ ಗಡಿಗಳನ್ನು ಮುಚ್ಚಲಾಗುವುದು. ಸಮಾಜಘಾತುಕ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಮುಂಜಾಗ್ರತಾ ಕ್ರಮವಾಗಿ ಬಂಧಿಸಲಾಗುವುದು’ ಎಂದು ಹೇಳಿದರು.
‘ದೇಗುಲಗಳು ಮತ್ತು ಮಸೀದಿಗಳ ಮೈಕ್ಗಳಿಂದ ಶಾಂತಿಪಾಲನೆಗೆ ಸಂದೇಶ ಬಿತ್ತರಿಸಲಾಗುವುದು. ಹಿಂಸಾಚಾರ ಪೀಡಿತ ಬೀದಿಗಳಲ್ಲಿ ಸ್ಥಳೀಯ ಶಾಸಕರು ಮತ್ತು ಪೊಲೀಸರು ಸಂಚರಿಸಿ ಶಾಂತಿ ಕಾಪಾಡಲು ಜನರಲ್ಲಿ ಮನವಿ ಮಾಡಲಿದ್ದಾರೆ. ಬೆಂಕಿ ಅನಾಹುತ ಸಂಭವಿಸಿದ ಕಡೆಗೆ ಅಗ್ನಿಶಾಮಕ ವಾಹನಗಳನ್ನು ತುರ್ತಾಗಿ ಕಳಿಸಿಕೊಡಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ’ ಎಂದು ತಿಳಿಸಿದರು.
ಇನ್ನಷ್ಟು...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.