ADVERTISEMENT

ಕಬ್ಬನ್ನು ಬೆಳೆವಿಮೆ ಯೋಜನೆ ಅಡಿ ಪರಿಗಣಿಸಲು ರಾಜ್ಯ ರೈತ ಸಂಘಗಳ ಒಕ್ಕೂಟ ಆಗ್ರಹ

ಕೃಷಿ ಉಪಕರಣಗಳ ಮೇಲಿನ ಜಿಎಸ್‌ಟಿ ಕಡಿತಕ್ಕೆ ಮನವಿ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2021, 10:06 IST
Last Updated 3 ಆಗಸ್ಟ್ 2021, 10:06 IST
ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಸದಸ್ಯರು ಪಾಲ್ಗೊಂಡಿದ್ದರು.
ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಸದಸ್ಯರು ಪಾಲ್ಗೊಂಡಿದ್ದರು.   

ನವದೆಹಲಿ: ರೈತರು ಖರೀದಿಸುವ ರಸಗೊಬ್ಬರ, ಕೀಟನಾಶಕ, ಕಳೆನಾಶಕ, ಬಿತ್ತನೆ ಬೀಜ ಮತ್ತು ಕೃಷಿ ಉಪಕರಣಗಳ ಖರೀದಿ ಮೇಲೆ ವಿಧಿಸುವ ಜಿಎಸ್‌ಟಿ ಮೊತ್ತವನ್ನು ಕಡಿತಗೊಳಿಸುವಂತೆ ರಾಜ್ಯ ರೈತ ಸಂಘಗಳ ಒಕ್ಕೂಟ ಕೇಂದ್ರ ಸರ್ಕಾರವನ್ನು ಕೋರಿದೆ.

ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಒಕ್ಕೂಟದ‌ ಅಧಕ್ಷ ಕುರುಬೂರು ಶಾಂತಕುಮಾರ್, ಕೇಂದ್ರದ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ರಾಜ್ಯ ಸಚಿವ ಭಗವಂತ‌ ಖೂಬಾ ಅವರಿಗೆ ಈ ಕುರಿತ ಮನವಿ ಸಲ್ಲಿಸಲಾಗಿದೆ ಎಂದರು.

ಪ್ರಸ್ತುತ ಈ ಉತ್ಪನ್ನಗಳ ಮೇಲೆ ಸರ್ಕಾರ‌ ಶೇ 5ರಿಂದ 18ರವರೆಗೆ ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ) ಆಕರಿಸುತ್ತಿದೆ. ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಈ ತೆರಿಗೆಯನ್ನು ಶೇ 1ಕ್ಕೆ ಕಡಿತಗೊಳಿಸುವಂತೆ ಕೋರಲಾಗಿದೆ ಎಂದು ಅವರು ತಿಳಿಸಿದರು.

ADVERTISEMENT

ಅತಿವೃಷ್ಟಿ ಅಥವಾ ಅನಾವೃಷ್ಟಿಯಿಂದ ಕಬ್ಬು ಬೆಳೆ ಹಾನಿಗೀಡಾದರೆ ರೈತರಿಗೆ ಯಾವುದೇ ರೀತಿಯ ಪರಿಹಾರ ದೊರೆಯುತ್ತಿಲ್ಲ. ಕಾರಣ, ಸರ್ಕಾರವು ಕಬ್ಬು ಬೆಳೆಯನ್ನು ಪ್ರಧಾನ ಮಂತ್ರಿ ಫಸಲ್‌ ವಿಮಾ ಯೋಜನೆ ಅಡಿ ಸೇರ್ಪಡೆ ಮಾಡುವಂತೆಯೂ ಇದೇ ವೇಳೆ ಒತ್ತಾಯಿಸಲಾಗಿದೆ ಎಂದು ಅವರು ವಿವರಿಸಿದರು.

ಕರ್ನಾಟಕ ಮತ್ತು ಕೇರಳಗಳಲ್ಲಿ ವ್ಯಾಪಕವಾಗಿ ಬೆಳೆಯುವ ವಿವಿಧ ತಳಿಯ ಬಾಳೆಹಣ್ಣಿಗೆ ದೆಹಲಿ ಸೇರಿದಂತೆ ಉತ್ತರ ಭಾರತದ ವಿವಿಧೆಡೆ ಮಾರುಕಟ್ಟೆ ಕಲ್ಪಿಸಬೇಕು. ದಕ್ಷಿಣ ರಾಜ್ಯಗಳಲ್ಲಿ ಬೆಳೆಯಲಾಗುವ‌ ಬಾಳೆ ಹಣ್ಣುಗಳ ಮೇಳವನ್ನು ಈ ಭಾಗದಲ್ಲಿ ಆಯೋಜಿಸುವ ಮೂಲಕ ರೈತರಿಗೆ ಉತ್ತೇಜನ ನೀಡಬೇಕು ಎಂದೂ‌ ಅವರು ಇದೇ ವೇಳೆ ಮನವಿ ಮಾಡಿದರು.

ಕೃಷಿ ಕಾಯ್ದೆ ಕೈಬಿಡಿ: ಕೇಂದ್ರವು ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಯನ್ನು ಕೂಡಲೇ ಕೈಬಿಡಬೇಕು. ರೈತರ ಜೀವನವನ್ನೇ ಬಲಿಕೊಡುವ ಈ ಕಾಯ್ದೆ ಹಿಂದಕ್ಕೆ ಪಡೆಯುವಂತೆ ರೈತರು ಸಲ್ಲಿಸಿರುವ ಬೇಡಿಕೆ ಈಡೇರಿಸಬೇಕು ಎಂದು ಅವರು ಆಗ್ರಹಿಸಿದರು.

ರೈತರ ಪ್ರತಿಭಟನನೆಗೆ ಕೇಂದ್ರ ಸರ್ಕಾರ ಮಣಿಯದಿದ್ದರೆ, ಮುಂಬರುವ ದಿನಗಳಲ್ಲಿ ನಡೆಯುವ ಎಲ್ಲ ರೀತಿಯ ಚುನಾವಣೆಗಳಲ್ಲಿ ರೈತರು ಬಿಜೆಪಿ ನೇತೃತ್ವದ ಎನ್‌ಡಿಎಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ಎಚ್ಚರಿಸಿದರು.

'ಕಳೆದ‌ ಎಂಟು ತಿಂಗಳಿಂದ ದೆಹಲಿ ಗಡಿಯಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿ ಒಕ್ಕೂಟದ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದೆವು' ಎಂದು ಅವರು ಹೇಳಿದರು.

ರೈತ ಮುಖಂಡರಾದ ವೀರನಗೌಡ ಪಾಟೀಲ, ಎಂ.ಜಿ. ಸಿಂದಗಿ, ಎನ್.ಎಚ್. ದೇವಕುಮಾರ್, ಬಸವರಾಜ ಪಾಟೀಲ, ಅತ್ತಹಳ್ಳಿ ದೇವರಾಜ್, ಬಸವರಾಜ ಯು. ಎಸ್, ರಮೇಶ್ ಹೂಗಾರ, ರೇವಣ್ಣ ಸಿದ್ದಯ್ಯ ಸ್ವಾಮಿ, ಬರಡನಪುರ ನಾಗರಾಜ, ಮಹಾದೇವಪ್ಪ ಶೇರಿಕರ ಹಾಗೂ ವಿ.ಟಿ. ಜಾನ್ ಅವರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.