ನವದೆಹಲಿ: ದೇಶದಲ್ಲಿ ಬಹುಕಾಲದಿಂದ ಪಾಲಿಸಲ್ಪಟ್ಟ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಟೊಳ್ಳು ಮಾಡಲು ಬಿಜೆಪಿ ಮತ್ತು ಆರ್ಎಸ್ಎಸ್ ಪಿತೂರಿ ನಡೆಸಿವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವದ ದಿನದ ಅಂಗವಾಗಿ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಬಿಜೆಪಿಯು ಚುನಾವಣಾ ಕಾರ್ಯತಂತ್ರವನ್ನೇ ಕಸಿದುಕೊಳ್ಳುತ್ತಿದೆ. ಗಂಭೀರ ಅಪರಾಧ ಪ್ರಕರಣಗಳಲ್ಲಿ 30 ದಿನಗಳ ವರೆಗೆ ಬಂಧನಕ್ಕೊಳಗಾಗುವ ಪ್ರಧಾನಿ, ಮುಖ್ಯಮಂತ್ರಿ ಹಾಗೂ ಸಚಿವರನ್ನು ಹುದ್ದೆಯಿಂದ ಅಮಾನತು ಮಾಡಲು ಅವಕಾಶ ಕಲ್ಪಿಸುವ ಮಸೂದೆ ಮಂಡನೆ ಮಾಡಲಾಗಿದೆ. ಈ ಮೂಲಕ ಸಂವಿಧಾನದ ನಿಜವಾದ ಅಂತ್ಯವಾಗಲಿದೆ ಎಂದು ಖರ್ಗೆ ಕಿಡಿಕಾರಿದ್ದಾರೆ.
ಕಳೆದ 11 ವರ್ಷಗಳಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಾಶಪಡಿಸಲು ಪ್ರಯತ್ನಿಸುತ್ತಿದೆ. ಸುಧಾರಣೆಯ ಮುಖವಾಡ ಹೊತ್ತು ಮತದಾರರ ಹಕ್ಕುಗಳನ್ನು ಕಸಿದುಕೊಳ್ಳಲು ಬಿಜೆಪಿ ಸಿದ್ಧವಾಗಿದೆ. ಬಿಹಾರದ ವಿಶೇಷ ಸಮಗ್ರ ಪರಿಷ್ಕರಣೆ ಮೂಲಕ ಲಕ್ಷಾಂತರ ಜನರನ್ನು, ವಿಶೇಷವಾಗಿ ದುರ್ಬಲ ವರ್ಗಗಳನ್ನು ಮತದಾನದ ಹಕ್ಕುಗಳಿಂದ ವಂಚಿತಗೊಳಿಸುವುದರ ಮೂಲ ಉದ್ದೇಶವಾಗಿತ್ತು. ಆದರೆ ಮತಕಳ್ಳತನ, ಮತ ಹಗರಣವನ್ನು ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬಹಿರಂಗಪಡಿಸಿದರು ಎಂದು ಖರ್ಗೆ ತಿಳಿಸಿದ್ದಾರೆ.
ಸಂವಿಧಾನ 130ನೇ ತಿದ್ದುಪಡಿ ಮಸೂದೆಯ ಮೂಲಕ ಕೇಂದ್ರವು ಚುನಾಯಿತ ರಾಜ್ಯ ಸರ್ಕಾರಗಳ ವಿರುದ್ಧ ಭ್ರಷ್ಟ ಎಂದು ಹಣೆಪಟ್ಟಿ ಕಟ್ಟಿ, ಸರ್ಕಾರಗಳನ್ನು ಉರುಳಿಸಲು ಪ್ರಯತ್ನಿಸುತ್ತದೆ. ಈಗಾಗಲೇ ಬಿಜೆಪಿಯ ಹಿಡಿತದಲ್ಲಿರುವ ಎನ್ಐಎ, ಸಿಬಿಐ, ಇಡಿ ಸೇರಿದಂತೆ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಖರ್ಗೆ ಟೀಕಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.