ADVERTISEMENT

ಫಡಣವಿಸ್ ನೇತೃತ್ವದ ಬಿಜೆಪಿ ನಿಯೋಗದಿಂದ ಮಹಾರಾಷ್ಟ್ರ ರಾಜ್ಯಪಾಲರಿಗೆ ದೂರು

ಏಜೆನ್ಸೀಸ್
Published 24 ಮಾರ್ಚ್ 2021, 6:46 IST
Last Updated 24 ಮಾರ್ಚ್ 2021, 6:46 IST
 ದೇವೇಂದ್ರ ಫಡಣವೀಸ್‌, ರಾಜ್ಯಪಾಲ ಭಗತ್‌ ಸಿಂಗ್‌ ಕೋಶಿಯಾರಿ
ದೇವೇಂದ್ರ ಫಡಣವೀಸ್‌, ರಾಜ್ಯಪಾಲ ಭಗತ್‌ ಸಿಂಗ್‌ ಕೋಶಿಯಾರಿ   

ಮುಂಬೈ: ಬಿಜೆಪಿ ನಾಯಕ ದೇವೇಂದ್ರ ಫಡಣವೀಸ್‌ ನೇತೃತ್ವದ ನಿಯೋಗವು ರಾಜ್ಯಪಾಲ ಭಗತ್‌ ಸಿಂಗ್‌ ಕೋಶಿಯಾರಿ ಅವರನ್ನು ಭೇಟಿ ಮಾಡಿ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ವರದಿ ಸಲ್ಲಿಸಿದೆ.

ಮಹಾರಾಷ್ಟ್ರದ ಪ್ರಸ್ತುತ ಪರಿಸ್ಥಿತಿ ಕುರಿತ ವರದಿಯನ್ನು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಅವರಿಗೆ ಕಳುಹಿಸುವಂತೆ ಬಿಜೆಪಿ ಮುಖಂಡರ ನಿಯೋಗವು ರಾಜ್ಯಪಾಲರಿಗೆ ಮನವಿ ಮಾಡಿದೆ.

ಮಹಾರಾಷ್ಟ್ರ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರದ ಆರೋಪ, ಪೊಲೀಸ್‌ ಅಧಿಕಾರಗಳ ವರ್ಗಾವಣೆ, ಉದ್ಯಮಿ ಮುಖೇಶ್‌ ಅಂಬಾನಿ ನಿವಾಸದ ಬಳಿ ಸಿಕ್ಕ ಸ್ಪೋಟಕ ಪ್ರಕರಣಗಳ ವಿಚಾರವಾಗಿ ರಾಜ್ಯಪಾಲರಿಗೆ ಬಿಜೆಪಿ ಮುಖಂಡರು ದೂರು ನೀಡಿದ್ದಾರೆ.

ಇತ್ತೀಚೆಗಷ್ಟೇ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್ ವಿರುದ್ಧ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಭ್ರಷ್ಟಾಚಾರದ ಆರೋಪ ಮಾಡಿದ್ದರು. ಇದು ಮಹಾರಾಷ್ಟ್ರ ಅಷ್ಟೇ ಅಲ್ಲದೆ ದೇಶದ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ADVERTISEMENT

ಅನಿಲ್ ದೇಶ್‌ಮುಖ್ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಆಗ್ರಹಿಸಿ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ಸೋಮವಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ಉದ್ಯಮಿ ಮುಕೇಶ್ ಅಂಬಾನಿ ಮನೆ ಬಳಿ ಸ್ಫೋಟಕಗಳಿದ್ದ ವಾಹನ ಪತ್ತೆ ಪ್ರಕರಣವನ್ನು ಸಮರ್ಪಕವಾಗಿ ನಿರ್ವಹಿಸಲು ವಿಫಲವಾಗಿದ್ದಾರೆ ಎಂಬ ಕಾರಣಕ್ಕೆ ಸಿಂಗ್ ಅವರನ್ನು ಪೊಲೀಸ್ ಆಯುಕ್ತರ ಸ್ಥಾನದಿಂದ ಮಾರ್ಚ್ 17ರಂದು ಎತ್ತಂಗಡಿ ಮಾಡಲಾಗಿತ್ತು. ಅವರ ಸ್ಥಾನಕ್ಕೆ ಹಿರಿಯ ಐಪಿಎಸ್ ಹೇಮಂತ್ ನಗ್ರಾಲೆ ಅವರನ್ನು ನೇಮಕ ಮಾಡಲಾಗಿದೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.