ADVERTISEMENT

ಮೋದಿ ಅಧಿಕಾರದಲ್ಲಿ ಇರುವವರೆಗೂ ಕನಿಷ್ಠ ಬೆಂಬಲ ಬೆಲೆ ಹಿಂಪಡೆಯಲ್ಲ: ಪ್ರಧಾನ್

ಏಜೆನ್ಸೀಸ್
Published 3 ಅಕ್ಟೋಬರ್ 2020, 12:17 IST
Last Updated 3 ಅಕ್ಟೋಬರ್ 2020, 12:17 IST
ಧರ್ಮೇಂದ್ರ ಪ್ರಧಾನ್ (ಸಂಗ್ರಹ ಚಿತ್ರ)
ಧರ್ಮೇಂದ್ರ ಪ್ರಧಾನ್ (ಸಂಗ್ರಹ ಚಿತ್ರ)   

ಭುವನೇಶ್ವರ (ಒಡಿಶಾ): ಪ್ರಧಾನಿ ನರೇಂದ್ರ ಮೋದಿ ಅಧಿಕಾರದಲ್ಲಿರುವ ವರೆಗೂ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಹಿಂಪಡೆಯುವುದಿಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಕೃಷಿ ಕ್ಷೇತ್ರ ಸುಧಾರಣೆಗೆ ಸಂಬಂಧಿಸಿದ ಮಸೂದೆಗಳ ಕುರಿತು ಅವರು ಈ ಹೇಳಿಕೆ ನೀಡಿದ್ದಾರೆ.

ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಈ ಹಿಂದೆ ರೈತರನ್ನು ವಂಚಿಸಿದ್ದವರು ಈಗ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

‘ರೈತರನ್ನು ಸ್ವಾವಲಂಬಿಯಾಗಿಸುವ ಸಲುವಾಗಿ ಕೃಷಿ ಮೂಲಸೌಕರ್ಯಕ್ಕಾಗಿ ಸರ್ಕಾರವು ₹1 ಲಕ್ಷ ಕೋಟಿ ವ್ಯಯಿಸುತ್ತಿದೆ. ಸ್ವಾತಂತ್ರ್ಯ ದೊರೆತು 70 ವರ್ಷಗಳಿಂದಲೂ ರೈತರಿಗೆ ಬೆಳೆಗೆ ಸರಿಯಾದ ಬೆಲೆ ದೊರೆಯುತ್ತಿಲ್ಲ. ಆದರೆ, ಹೊಸ ಮಸೂದೆಗಳಿಂದಾಗಿ ಅವರು ಸ್ವಾವಲಂಬಿಗಳಾಗಲಿದ್ದಾರೆ. ಬೆಳೆಗೆ ಉತ್ತಮ ಬೆಲೆ ಪಡೆಯಲಿದ್ದಾರೆ’ ಎಂದು ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ರೈತರ ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಮಸೂದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕುರಿತಂತೆ ರೈತರ ಜತೆ (ಸಬಲೀಕರಣ ಮತ್ತು ರಕ್ಷಣೆ) ಒಪ್ಪಂದ ಮಸೂದೆಗಳಿಗೆ ಇತ್ತೀಚೆಗೆ ರಾಜ್ಯಸಭೆಯಲ್ಲಿ ಅನುಮೋದನೆ ಪಡೆಯಲಾಗಿತ್ತು. ಇದಕ್ಕೆ ಪ್ರತಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಮಸೂದೆಗಳನ್ನು ವಿರೋಧಿಸಿ ದೇಶದಾದ್ಯಂತ ಈಗಲೂ ಪ್ರತಿಭಟನೆಗಳು ನಡೆಯುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.